Breaking NewsLatestಮೆಟ್ರೋ
ಮೇಕೆದಾಟು ವಿಚಾರದಲ್ಲಿ ತಮಿಳುನಾಡು ರಾಜಕೀಯ ಮಾಡುತ್ತಿದೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೇಕೆದಾಟು ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ತಮಿಳುನಾಡು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ ಮತ್ತು ಯೋಜನೆಯನ್ನು ವಿರೋಧಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರು, ವಿದ್ಯುಚ್ಚಕ್ತಿ ಮತ್ತು ಕಷ್ಟಕಾಲದಲ್ಲಿ ನೀರು ಹಂಚಿಕೆ ಮಾಡಲು ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಎಲ್ಲರಿಗೂ ಗೊತ್ತು ಆದರೂ ತಮಿಳುನಾಡು ಇದನ್ನು ರಾಜಕಾರಣಕ್ಕೆ ಬಳಕೆ ಮಾಡುತ್ತಿದೆ ಎಂದರು.
ಯೋಜನೆ ಅನುಷ್ಠಾನಕ್ಕೆ ಅನುಮತಿ ಕೋರಿ ಮೊನ್ನೆ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ತಾವು ಹಾಗೂ ಸಂಸದರ ನಿಯೋಗ ಭೇಟಿ ಮಾಡಿತ್ತು. ಆದಷ್ಟು ಬೇಗ ಯೋಜನೆಗೆ ಅನುಮತಿ ದೊರಕುವ ವಿಶ್ವಾಸವಿದೆ. ಅನುಮತಿ ದೊರೆತ ಕೂಡಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ರಾಜಕಾರಣಕ್ಕೆ ಕೆಲವರು ಪ್ರತಿಭಟಿಸುತ್ತಿದ್ದಾರೆ. ಅದಕ್ಕೂ ನಮಗೂ ಸಂಬಂಧ ಇಲ್ಲ. ಅದನ್ನು ತಾವು ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ಸಿಎಂ ಹೇಳಿದರು.
