ಸಚಿವ ಕೋಟ ಅಭಿಮಾನಿಗಳಿಂದ ದೇವಸ್ಥಾನಕ್ಕೆ ಪಾದಯಾತ್ರೆ

ಉಡುಪಿ: ಬೊಮ್ಮಾಯಿ ಮಂತ್ರಿಮಂಡಲದಲ್ಲಿ ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ ಸಿಕ್ಕಿದ್ದು ಜಿಲ್ಲೆಯಾದ್ಯಂತ ಬಿಜೆಪಿ ಅಭಿಮಾನಿ ವಲಯದಲ್ಲಿ ಸಂತೋಷ ಮನೆಮಾಡಿದೆ.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಜಿಲ್ಲೆಯಲ್ಲಿ ಸಚಿವರಾಗಿ ಆಯ್ಕೆಯಾಗಿದ್ದು, ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲ.
ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮೂರನೇ ಬಾರಿ ಸಚಿವ ಸಂಪುಟದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಇದೀಗ ಕೊಡುಗು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆಯ್ಕೆ ಆಗಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿಯವರ ಹುಟ್ಟೂರು ಕೋಟದಿಂದ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಅಭಿಮಾನಿಗಳಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು.
ಕೋಟದಿಂದ ಸುಮಾರು 30 ಕಿಮೀ ದೂರವಿರುವ ಮಾರುಕಟ್ಟೆ ದೇವಸ್ಥಾನ ಇದಾಗಿದ್ದು ಸಚಿವ ಕೋಟ ಆಪ್ತ ಸಹಾಯಕ ಹರೀಶ್ ಶೆಟ್ಟಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯಿತು. ಮಾರಣಕಟ್ಟೆ ದೇವಳದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ ಅಭಿಮಾನಿಗಳು ಸಚಿವರಾಗಿ ಆಯ್ಕೆಯಾದ ಪೂಜಾರಿಯವರ ಉತ್ತಮ ರಾಜಕೀಯ ಭವಿಷ್ಯಕ್ಕಾಗಿ ಪ್ರಾರ್ಥಿಸಿದರು.




