ಕೋವಿಡ್ ಮತ್ತು ಅತೀವೃಷ್ಟಿಯಿಂದ ರಾಜ್ಯದಲ್ಲಿ ತೊಂದರೆಯಾಗಿದೆ: ಸಚಿವ ಆರಗ ಜ್ಞಾನೇಂದ್ರ

ಚಿಕ್ಕಮಗಳೂರು: ರಾಜ್ಯದಲ್ಲಿ ಕೋವಿಡ್ ಮಹಾಮಾರಿ ಮತ್ತು ಅತೀವೃಷ್ಟಿಯಿಂದ ಜನರು ತೊಂದರೆ ಅನುಭವಿಸುವಂತಾಗಿದೆ. ಮೂರನೇ ಅಲೆ ಆರಂಭವಾಗಿರುವುದರಿಂದ ಜನ ಮತ್ತೆ ಆತಂಕಕ್ಕೆ ಒಳಗಾಗುವಂತಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿರುವ ಅವರು, ಮಳೆ ಅನಾಹುತಗಳ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠಕ್ಕೆ ಭೇಟಿ ನೀಡಿ, ಡಾ.ವೀರಸೋಮೇಶ್ವರ ಜಗದ್ಗುರುಗಳ ಆಶೀರ್ವಾದ ಪಡೆದರು.
ಈ ವೇಳೆ ಮಾತನಾಡಿದ ಅವರು, ರಾಜ್ಯದ ಗೃಹ ಇಲಾಖೆಯ ಹೊಣೆಗಾರಿಕೆಯನ್ನು ಸಮರ್ಥವಾಗಿ, ಪ್ರಾಮಾಣಿಕತೆ, ಮತ್ತು ದಕ್ಷತೆಯಿಂದ ನಿರ್ವಹಿಸುವುದಾಗಿ ಭರವಸೆ ನೀಡಿದರು.
ಡಾ.ವೀರಸೋಮೇಶ್ವರ ಜಗದ್ಗುರುಗಳು ಮಾತನಾಡಿ, ಜನರ ಸಂಕಷ್ಟಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಕೆಲಸ ಮಾಡಬೇಕು. ಜತೆಗೆ ಎಲ್ಲಾ ಸಮುದಾಯಗಳ ಒಳಿತಿಗೆ ಶ್ರಮಿಸಬೇಕು. ರಾಜಕೀಯ ವಿಷಯದಲ್ಲಿ ಜನರ ಸಂಘರ್ಷ ಏರ್ಪಡಲು ಅವಕಾಶ ನೀಡಬಾರದು ಎಂದು ಕಿವಿಮಾತು ಹೇಳಿದರು.
ಈ ವೇಳೆ ಸಚಿವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಶುಭ ಹಾರೈಸಿದರು. ಈ ವೇಳೆ ರಂಭಾಪುರಿ ಬೆಳಗು ಸಂಚಿಕೆಯನ್ನು ಸಚಿವ ಆರಗ ಜ್ಞಾನೇಂದ್ರ ಬಿಡುಗಡೆ ಮಾಡಿದರು.
