ರಾಮದಾಸ್ ಗೆ ಮತ್ತೊಂದು ಸಂಕಟ: ಕ್ರಿಮಿನಲ್ ಕೇಸ್ ದಾಖಲಿಸುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ

ಮೈಸೂರು: ಸಚಿವ ಸ್ಥಾನ ಸಿಗದೆ ಸರ್ಕಾರದ ವಿರುದ್ಧ ಅಸಮಾಧಾನ ಸ್ಪೋಟಗೊಳಿಸಿದ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ರಾಮದಾಸ್ ಗೆ ಮತ್ತೊಂದು ಸಂಕಟ ಎದುರಾಗಿದೆ. ರಾಮದಾಸ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ.
1994 ರಲ್ಲಿ ನಡೆದ ಭೂ ಹಗರಣ ಸಂಬಂಧ ಅಂದಿನ ಜಿಲ್ಲಾಧಿಕಾರಿಯಾಗಿದ್ದ ತ.ಮ.ವಿಜಯಭಾಸ್ಕರ್ ಅವರು ವರದಿಯೊಂದನ್ನು ಸಲ್ಲಿಸಿದ್ದರು. ಈ ವರದಿ ಆಧರಿಸಿ 2008 ರಲ್ಲಿ ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಸ್ಟೇಷನ್ ನಲ್ಲಿ ಮೊಕದ್ದಮೆ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೇ ವೇಳೆ ಮೈಸೂರಿನ ಕೆಳ ನ್ಯಾಯಾಲಯದ ಇದನ್ನು ಅಂಗೀಕರಿಸಿತ್ತು.
ಇದನ್ನು ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಮೈಸೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆಕ್ಷೇಪಣಾ ಅರ್ಜಿ ಸಲ್ಲಿಸಿದರು. ರಾಮದಾಸ್ ಅವರು ಶಾಸಕರಾಗಿ ಆಯ್ಕೆಯಾದ ಹಿನ್ನೆಲೆ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯಕ್ಕೆ ಈ ಕೇಸ್ ವರ್ಗಾವಣೆಯಾಯಿತು.
ಆದರೆ ಇದನ್ನು ಆಕ್ಷೇಪಿಸಿದ ರಾಮದಾಸ್ ಅವರು ಹೈಕೋರ್ಟ್ ನಿಂದ ತಡೆಯಾಜ್ಞೆ ತಂದರು. ಈಗ ಹೈಕೋರ್ಟ್ ಕೂಡ ತಡೆಯಾಜ್ಞೆ ತೆರವು ಮಾಡಿದೆ. ಈ ಹಿನ್ನೆಲೆಯಲ್ಲಿ ರಾಮದಾಸ್ ವಿರುದ್ಧ ಸೆಕ್ಷನ್ 420 ಮತ್ತು 468 ರ ಅಡಿಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲು ಹೈಕೋರ್ಟ್ ಸೂಚಿಸಿದೆ.
