ಲೇಖಕಿ, ಸ್ರೀರೋಗತಜ್ಞೆ ಡಾ. ಗಿರಿಜಮ್ಮ ನಿಧನ

ಬೆಂಗಳೂರು: ಲೇಖಕಿ, ಪ್ರಖ್ಯಾತ ಸ್ರೀರೋಗತಜ್ಞೆ ಡಾ. ಎಚ್ ಗಿರಿಜಮ್ಮ(70) ನಿಧನರಾಗಿದ್ದಾರೆ.
ದಾವಣಗೆರೆಯ ಎಸ್ ಎಸ್ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಅವರು ಮಂಗಳವಾರ ಬೆಳಗ್ಗೆ ನಿಧನ ಹೊಂದಿದರು.
ದಾವಣಗೆರೆಯವರಾದ ಡಾ. ಗಿರಿಜಮ್ಮ, ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆದಿದ್ದರು.
ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು ಗ್ರಾಮೀಣ ಭಾಗದ ಮಹಿಳೆಯರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದ್ದರು.
ವೈದ್ಯೆ ಮಾತ್ರವಲ್ಲದೆ, ಸಾಹಿತ್ಯದ ಮೂಲಕವೂ ಅವರು ಗುರುತಿಸಿಕೊಂಡಿದ್ದರು. ಕಿರುಚಿತ್ರ ಮತ್ತು ಧಾರಾವಾಹಿಗಳಲ್ಲಿನ ಅಭಿನಯದಿಂದಲೂ ಜನಪ್ರಿಯರಾಗಿದ್ದರು.
ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿ ಅವರು ಹಲವಾರು ಕೃತಿಗಳನ್ನು ಬರೆದಿದ್ದರು. ತಮಸೋಮ ಜ್ಯೋತಿರ್ಗಮಯ, ಅಂಬರತಾರೆ, ಮೊದಲಾದ ಒಟ್ಟು 27 ಕಾದಂಬರಿಗಳನ್ನು ಬರೆದಿದ್ದಾರೆ. 50ಕ್ಕೂ ಹೆಚ್ಚು ಕಥೆಗಳನ್ನು ಬರೆದಿರುವ ಅವರ ಐದು ಕಥಾ ಸಂಕಲನಗಳು ಪ್ರಕಟವಾಗಿವೆ.
ರಾಜ್ಯೋತ್ಸವ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಬಿ.ಸರೋಜಾದೇವಿ ಸಾಹಿತ್ಯ ದತ್ತಿ ಪ್ರಶಸ್ತಿ, ಕನ್ನಡ ಲೇಖಕಿಯರ ಸಂಘದ ಅನುಪಮಾ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಗೌರವಗಳಿಗೆ ಅವರು ಪಾತ್ರರಾಗಿದ್ದರು.
