Blast: ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ; ನಿಗೂಢ ಸ್ಫೋಟಕ್ಕೆ ಮೂವರ ಸಾವು

ಬೆಂಗಳೂರು : ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಸ್ಫೋಟಗೊಂಡು ಮೂವರು ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆ ರಾಯನ್ ಸರ್ಕಲ್ ಬಳಿಯ ನ್ಯೂ ತರುಪೇಟೆಯಲ್ಲಿ ನಡೆದಿದೆ.
ಎರಡು ದಿನಗಳ ಹಿಂದಷ್ಟೇ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಅನಾಹುತ ಸಂಭವಿಸಿದ್ದು, ಮನೆಯೊಂದರಲ್ಲಿ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದಾರೆ. ಸ್ಫೋಟದ ರಭಸಕ್ಕೆ ಮೂವರ ದೇಹ ಛಿದ್ರ ಛಿದ್ರಗೊಂಡಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಂಕ್ಚರ್ ಶಾಪ್ ಮಾಲೀಕ ಅಸ್ಲಮ್ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಪೋಟಗೊಂಡ ವೇಳೆ ಅಲ್ಲಿನ ಸಿಬ್ಬಂದಿಯ ಸಹಾಯಕ್ಕೆ ಬಂದ ಜನ, ಪೊಲೀಸ್ ಬರುವಷ್ಟರಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದಾರೆ. ಸುತ್ತಮುತ್ತಲಿನ 100 ಮೀಟರ್ ದೂರದವರೆಗೆ ಶಬ್ದ ಕೇಳಿದೆ. ಭಯದಿಂದ ಸ್ಥಳೀಯರು ಮನೆಯಿಂದ ಹೊರಬಂದು ನೋಡಿದ್ದಾರೆ. ಭೂಕಂಪನದ ರೀತಿಯಲ್ಲಿ ಜನರಿಗೆ ಅನುಭವವಾಗಿದೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಬೈಕ್ಗಳು ಸುಟ್ಟು ಕರಕಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಕ್ಕಪಕ್ಕದ ಮನೆಗಳಲ್ಲಿದ್ದವರಿಗೂ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಗಳ ಕಿಟಕಿ ಗಾಜು ಪುಡಿಪುಡಿಯಾಗಿವೆ. ಸ್ಥಳಕ್ಕೆ ಪೊಲೀಸರು ಸಹ ಭೇಟಿ ನೀಡಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
