
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹಣ ಹಾಗೂ ಜಾತಿ ಚುನಾವಣೆಗಳಲ್ಲಿ ಪ್ರಾಧಾನ್ಯತೆ ಪಡೆದು ವಿಕೃತ ರಾಜಕಾರಣ ಬೆಳೆದಿದೆ. ಇದಕ್ಕೆ ಕಾರಣ ಬಿಜೆಪಿ, ಅವರು ಬ್ರಿಟೀಷರಂತೆ ಮತಗಳು, ಧರ್ಮಗಳ ನಡುವೆ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಇದು ಯಾವಾಗಲೂ ಯಶಸ್ವಿಯಾಗುವುದಿಲ್ಲ. ಪ್ರಧಾನಿ ಖ್ಯಾತಿ ಕುಸಿತವೇ ಇದಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಕಿಡಿಕಾರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರ ಜೊತೆ ಜಂಟಿ ಸುದ್ದಿಗೋಷ್ಡಿ ನಡೆಸಿ ಮಾತನಾಡಿದ ಅವರು, ಜಿಎಸ್ಟಿ, ನೋಟು ರದ್ಧತಿ ಮೂಲಕ ಸರ್ಕಾರ ಜನರ ಮೇಲೆ ಬರೆ ಎಳೆದಿದೆ. ರಾಷ್ಟ್ರದ ಸಂಪತ್ತಿನಲ್ಲಿ ಶೇ.50 ರಷ್ಟು ದೇಶದ ಶೇ.10 ರಷ್ಟು ಶ್ರೀಮಂತರ ಕೈಯಲ್ಲಿದೆ. ಜಿಡಿಪಿ ಋಣಾತ್ಮಕ ಹಂತ ತಲುಪಿದೆ, ನಿರುದ್ಯೋಗ ಹೆಚ್ಚಾಗಿದೆ. ಆದರೆ 14 ಕೋಟಿ ಉದ್ಯೋಗ ಕಳೆದುಕೊಂಡಿದ್ದೇವೆ. ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ ಹಾಕುತ್ತೇವೆ ಎಂದು ಜನರನ್ನು ಅಪಹಾಸ್ಯ ಮಾಡಿದ್ದಾರೆ ಎಂದರು.
ಭ್ರಷ್ಟಾಚಾರ ನಿರ್ಮೂಲನೆ ಮಾಡಲು ನಾನು ಕಾನೂನು ಸಚಿವ ಆಗಿದ್ದಾಗ ಒಂದು ಸಮಿತಿ ಮಾಡಿದ್ದೆವು. ನಂತರ 2014ರಲ್ಲಿ ಲೋಕಪಾಲ ಮಸೂದೆ ಜಾರಿಗೆ ತಂದಿದ್ದೆವು. ನಾವು ಅದಕ್ಕೆ ಬದ್ಧವಾಗಿದ್ದೆವು. ಆದರೆ 2017ರವರೆಗೆ ಲೋಕಪಾಲರ ನೇಮಕ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ಸರ್ಕಾರವನ್ನು ಪ್ರಶ್ನಿಸಿತ್ತು. ನಂತರ ಲೋಕಪಾಲರನ್ನು ನೇಮಕ ಮಾಡಿತ್ತು. ರಾಜ್ಯದಲ್ಲೂ ಲೋಕಾಯುಕ್ತರು ಇಲ್ಲ, ಕೇಂದ್ರದಲ್ಲಿ ಲೋಕಪಾಲರೂ ಇಲ್ಲ. ಭ್ರಷ್ಟಾಚಾರ ಲಾಭ ಪಡೆದು ಅಧಿಕಾರಕ್ಕೆ ಬಂದ ಮೋದಿ, ಕೇಜ್ರಿವಾಲ್ ಇಂದು ಭ್ರಷ್ಟಾಚಾರ ನಡೆಯುತ್ತಿದ್ದರೂ ಮೌನವಾಗಿದ್ದಾರೆ ಎಂದು ಟೀಕಿಸಿದರು.
ಬಳಿಕ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ, ರಾಜ್ಯ ಹಾಗೂ ದೇಶದಲ್ಲಿ ರಾಜಕಾರಣ ಹದಗೆಟ್ಟಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದವರ ಕೈಯಲ್ಲಿ ದೇಶದ ಅಧಿಕಾರ ಸಿಕ್ಕಿದೆ. ದೇಶಕ್ಕೆ ಸ್ವಾತಂತ್ರ್ಯ ತಂದವರನ್ನು ಮೂಲೆಗುಂಪು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



