ಆಲಮಟ್ಟಿಯಲ್ಲಿ ಪ್ರಾಣಿಸಂಗ್ರಹಾಲಯ: ಸಚಿವ ಕಾರಜೋಳ

ಬಾಗಲಕೋಟೆ : ಅಖಂಡ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಜಲಾಶಯ ವ್ಯಾಪ್ತಿಯಲ್ಲಿ ಪ್ರಾಣಿ ಸಂಗ್ರಹಾಲಯ ಸ್ಥಾಪನೆಗೆ ಕ್ರಮಕೈಗೊಳ್ಳಲಾಗುವುದೆಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಬಾಗಲಕೋಟೆ ಬಳಿಯ ಸುಕ್ಷೇತ್ರ ಮುಚಖಂಡಿ ವೀರಭದ್ರೇಶ್ವರ ದೇವಾಲಯದ ಆವರಣದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಸುಸ್ಥಿರ ಹಾಗೂ ಅಂತರ್ಗತ ಬೆಳವಣಿಗೆಗೆ ಪ್ರವಾಸೋದ್ಯಮ ಎಂಬ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಂಡ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಾಣಿಗಳನ್ನು ನೋಡಬೇಕಾದರೆ ನಮ್ಮ ಮಕ್ಕಳನ್ನು ಮೈಸೂರಿಗೆ ಕರೆದುಕೊಂಡು ಹೋಗಬೇಕಾಗುತ್ತದೆ. ಉತ್ತರ ಕರ್ನಾಟಕದಲ್ಲಿ ಒಂದು ಪ್ರಾಣಿ ಸಂಗ್ರಹಾಲಯ ಅವಶ್ಯಕತೆ ಇದ್ದು, ಶಾಸಕ ವೀರಣ್ಣ ಚರಂತಿಮಠ ಹಾಗೂ ತಾವುಗಳು ಪ್ರಾಣಿ ಸಂಗ್ರಹಾಲಯ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕಾರಜೋಳ ತಿಳಿಸಿದರು.
ಇಡೀ ಪ್ರಪಂಚದಲ್ಲಿ ಪ್ರವಾಸೋದ್ಯಮ ಉದ್ಯೋಗ ಒದಗಿಸುವ ಒಂದು ಬೃಹತ್ ಕ್ಷೇತ್ರವಾಗಿದೆ. ಅವುಗಳ ಅಭಿವೃದ್ದಿಗೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ. ಐತಿಹಾಸಿ ಕ್ಷೇತ್ರಗಳನ್ನು ಅಭಿವೃದ್ದಿ ಪಡಿಸುವ ಮೂಲಕ ಸುಂದರವಾಗಿ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಬೇರೆ ಬೇರೆ ದೇಶದವರನ್ನು ನಮ್ಮ ದೇಶಕ್ಕೆ ಸೆಳೆಯುವ ಕೆಲಸವಾಗಬೇಕು ಅಂದಾಗ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಾರ ವಹಿವಾಟು ಆಗಲು ಸಾಧ್ಯವಾಗುತ್ತದೆ. ಕ್ರೀಡೆ ಮತ್ತು ಪ್ರವಾಸೋದ್ಯಮಕ್ಕೆ ಹೆಚ್ಚಿನ ಮಹತ್ವ ಕೊಡದೆ ಇದ್ದ ಕಾರಣ ಸ್ವಾತಂತ್ರ್ಯ ಸಿಕ್ಕು 75 ವರ್ಷವಾದರೂ ಪ್ರವಾಸೋದ್ಯಮ ಅಭಿವೃದ್ದಿ ಆಗಿಲ್ಲವೆಂದರು.
ಅಖಂಡ ವಿಜಯಪೂರ-ಬಾಗಲಕೋಟೆ ಜಿಲ್ಲೆಯಲ್ಲಿ ಅನೇಕ ಐತಿಹಾಸಿಕ ಸ್ಥಳಗಳಿವೆ. ಬಾದಾಮಿ ಚಾಲುಕ್ಯರ ಮತ್ತು ವಿಜಯಪುರದ ಆದಿಲಶಾಯಿ ಆಡಳಿತದ್ದು, ಅಲ್ಲದೇ ಪೇಶ್ವೆ ಆಳ್ವಿಕೆಯ ಕಾಲದಲ್ಲಿ ನಿರ್ಮಾಣವಾದ ದೇವಾಲಯಗಳು ಇಂದು ಐತಿಹಾಸಿಕ ಸ್ಥಳಗಳಾಗಿವೆ. ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಜನರನ್ನು ತೊಡಗಿಸುವ ಕಾರ್ಯಕ್ರಮಗಳನ್ನು ರೂಪಿಸಲು ಮುಂದಾಗಬೇಕಿದೆ. ಮುಚಖಂಡಿಯಲ್ಲಿ 1882ರಲ್ಲಿ ಕಟ್ಟಿದ ಕೆರೆ, ವೀರಭದ್ರೇಶ್ವರ ದೇವಸ್ಥಾನ ಇರುವದರಿಂದ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಕೂಗು ಇದ್ದು, ಕ್ರಮವಹಿಸಲಾಗುವುದೆಂದು ಕಾರಜೋಳ ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರತ್ರ ವಿತರಿಸಿದರು. ಅಲ್ಲದೇ ಅತ್ಯುತ್ತಮ ಪ್ರವಾಸಿ ಮಾರ್ಗದರ್ಶಿ ಈರಪ್ಪ ಅಂಗಡಿ ಅವರಿಗೆ ಅಭಿನಂದನಾ ಪತ್ರ ಮತ್ತು ಪ್ರವಾಸಿ ಮಿತ್ರ ಸಿಬ್ಬಂದಿಗಳಿಗೆ ಸಮವಸ್ತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ್, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಾಯಣ್ಣಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.




