
ಬೆಂಗಳೂರು: ಕಲ್ಲಿದ್ದಲು ಕೊರತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯ ಕಾರಣ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಕಲ್ಲಿದ್ದಲು ಕೊರತೆ, ವಿದ್ಯುತ್ ಕಡಿತ ವಿಚಾರವಾಗಿ ನಾನು ಕೂಡ ವಿಶ್ಲೇಷಣೆ ಮಾಡುತ್ತಿದ್ದೇನೆ. ರಾಜ್ಯದಲ್ಲಿ ವಿದ್ಯುತ್ ಅಭಾವ ಇದೆ ಎಂದು ಬಿಂಬಿಸಿದರೆ ಬಂಡವಾಳ ಹೂಡಿಕೆದಾರರು ಹಿಂಜರಿಯುತ್ತಾರೆ ಎಂಬುದನ್ನು ಸರ್ಕಾರ ಮನಗಾಣಬೇಕು ಎಂದರು.
ಈ ಸರ್ಕಾರ ಸತ್ತವರಿಗೇ ಪರಿಹಾರ ನೀಡಿಲ್ಲ. ಇನ್ನು ಮಳೆ ಸಂತ್ರಸ್ತರಿಗೆ ಕೊಡುತ್ತಾರೆಯೇ? ಈ ಸರಕಾರಕ್ಕೆ ಬಡವರಿಗೆ ನೆರವಾಗುವ ಅನುಭವವಾಗಲಿ, ಮನಸ್ಥಿತಿಯಾಗಲಿ ಇಲ್ಲ. ರೈತರ ಬಗ್ಗೆ ಕಾಳಜಿಯಂತೂ ಮೊದಲೇ ಇಲ್ಲ ಎಂದು ಹೇಳಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಷ್ಟ್ರ ರಾಜಕಾಣಕ್ಕೆ ಹೋಗುವ ವಿಚಾರವಾಗಿ ಪಕ್ಷ ಉಂಟು, ನಮ್ಮ ಶಾಸಕಾಂಗ ಪಕ್ಷದ ನಾಯಕರು ಉಂಟು. ಈ ವಿಷಯದಲ್ಲಿ ತಾನು ಹಸ್ತಕ್ಷೇಪ ಮಾಡುವುದಿಲ್ಲ. ಸಿದ್ದರಾಮಯ್ಯ ಅವರು ರಾಷ್ಟ್ರ ಮಟ್ಟದ ರಾಜಕಾರಣಕ್ಕೆ ಹೋಗುವ ವಿಚಾರವಾಗಿ ನಮ್ಮ ಬಳಿ ಯಾವುದೇ ಚರ್ಚೆ ಆಗಿಲ್ಲ. ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅದು ಕೇವಲ ಊಹಾಪೋಹ ಮಾತ್ರ ಎಂದೆನಿಸುತ್ತದೆ ಎಂದೂ ಶಿವಕುಮಾರ್ ಹೇಳಿದರು.
ರಾಹುಲ್ ಗಾಂಧಿ ಅವರೇ ಜವಾಬ್ದಾರಿ ವಹಿಸಿಕೊಳ್ಳಬೇಕು:
ಇಡೀ ದೇಶದ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಅವರೇ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಈಗ ರಾಹುಲ್ ಗಾಂಧಿ ಅವರೇ ಕೆಲಸ ಮಾಡುತ್ತಿದ್ದು, ಅವರ ಮುಂದಾಳತ್ವ ಬೇಕು ಎಂಬುದು ಇಡೀ ಕಾಂಗ್ರೆಸ್ ಕಾರ್ಯಕರ್ತರ ಅಪೇಕ್ಷೆ. ಪಕ್ಷದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ವಿಚಾರವಾಗಿ ಕೆಲವೊಂದು ಪ್ರಕ್ರಿಯೆಗಳಿವೆ. ಆ ಮೂಲಕ ಆಯ್ಕೆ ನಡೆಯುತ್ತದೆ ಎಂದರು.
ಬಿಜೆಪಿ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ:
ಉಪಚುನಾವಣೆಯಲ್ಲಿ ಬಿಜೆಪಿ ಅವರು ತಮ್ಮ ಬಂಡಾಯ ಅಭ್ಯರ್ಥಿಯನ್ನು ಸ್ಪರ್ಧೆಯಿಂದ ಹಿಂದೆ ಸರಿಸಿರುವುದು ಅವರ ತಂತ್ರಗಾರಿಕೆ. ಅವರ ರಾಜಕೀಯ ತಂತ್ರಗಾರಿಕೆ ಅವರು ಮಾಡಿಕೊಳ್ಳಲಿ. ಅವರು ಯಾರನ್ನಾದರೂ ಅಭ್ಯರ್ಥಿ ಮಾಡಲಿ. ಯಾರ ಮನಸ್ಸಾದರೂ ಓಲೈಸಲಿ. ಅದಕ್ಕೂ ನಮಗೂ ಸಂಬಂಧವಿಲ್ಲ. ಅವರ ಪಕ್ಷ ರಾಜಕಾರಣದ ಗೊಡವೆ ನಮಗೆ ಬೇಡ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.



