ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್: ಕಟೀಲ್ ವಿವಾದಾತ್ಮಕ ಹೇಳಿಕೆ

ಧಾರವಾಡ : ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯ ಅಖಾಡ ಒಂದು ಕಡೆ ರಂಗೇರುತ್ತಿದ್ದು, ರಾಜಕೀಯ ನಾಯಕರು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಮಾತಿನ ಬರದಲ್ಲಿ ವಿವಾದಗಳನ್ನು ಸೃಷ್ಟಿಸುತ್ತಿದ್ದು, ಕಾಂಗ್ರೆಸ್ ನಾಯಕ ‘ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್’ ಎಂಬ ವರದಿಯಿದೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಪಕ್ಷದ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಡ್ರಗ್ ಪೆಡ್ಲರ್…ಹೀಗಂತ ನಾನು ಹೇಳುತ್ತಿಲ್ಲ ಮಾಧ್ಯಮಗಳಲ್ಲಿಯೇ ಹರಿದಾಡುತ್ತಿದೆ. ಒಂದು ರಾಜಕೀಯ ಪಕ್ಷವನ್ನೇ ಮುನ್ನಡೆಸಲಾಗದವರು ಇನ್ನು ದೇಶವನ್ನು ಮುನ್ನಡೆಸಲು ಸಾಧ್ಯವೇ ಎಂದು ಪ್ರಶ್ನೆ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ನಲ್ಲಿ ಅಧ್ಯಕ್ಷಗಾದಿಗಾಗಿ ತಾಯಿ ಮಗನ ನಡುವೆ ಪೈಪೋಟಿ:
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷಗಾದಿಗಾಗಿ ತಾಯಿ ಸೋನಿಯಾ ಗಾಂಧಿ ಹಾಗೂ ಮಗ ರಾಹುಲ್ ಗಾಂಧಿ ಮಧ್ಯೆಯೇ ಪೈಪೋಟಿ ನಡೆಯುತ್ತಿದೆ. ಒಂದು ರಾಷ್ಟ್ರೀಯ ಪಕ್ಷವನ್ನು ಮುನ್ನೆಡೆಸಲು ಸಾಧ್ಯವಾಗುತ್ತಿಲ್ಲ. ಇವರಿಗೆ ಇನ್ನು ದೇಶ ಮುನ್ನಡೆಸುವ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಎರಡು ಹೋಲಾಗುತ್ತದೆ:
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಮ್ಮ ಪ್ರಧಾನಿ ’ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಅಂದ್ರೆ ವಿಪಕ್ಷ ನಾಯಕ ಸಿದ್ದರಾಮಯ್ಯನವರದ್ದು ’ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್’. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಮುಸ್ಲೀಂರ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಇನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೋಡೆತ್ತುಗಳಲ್ಲ, ಕಾಡೆತ್ತುಗಳು. ಒಬ್ಬರಿಗೊಬ್ಬರು ಕಾದಾಟ ಆರಂಭಿಸಿದ್ದಾರೆ. ಉಗ್ರಪ್ಪ ಪಿಸುಮಾತಿನ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ. ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ ಇಬ್ಭಾಗವಾಗಲಿದೆ ಎಂದು ಹೇಳಿದರು.
ಜೆಡಿಎಸ್- ಕಾಂಗ್ರೆಸ್ನಿಂದ ಚಿಲ್ಲರೆ ರಾಜಕೀಯ:
ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಚಿಲ್ಲರೆ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಬಹುಸಂಖ್ಯಾತರ ವೋಟ್ ಸಿಗಲ್ಲ ಅನ್ನೋದು ಗೊತ್ತಾಗಿದೆ. ಹೀಗಾಗಿ ಆರ್ಎಸ್ಎಸ್ಗೆ ಬೈಯುವ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್ ಕುಂಟುಂಬ ರಾಜಕೀಯ ಮಾಡುತ್ತಾ ಹಾಳಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಎರಡು ಪಕ್ಷಗಳು ಸೋಲುತ್ತವೆ. ಮತ್ತೆ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಘಗೂ ಸಿಎಂ ಬಸವರಾಜ ಬೊಮ್ಮಾಯಿ ಅವರ ಆಡಳಿತಕ್ಕೆ ಜನರ ಮೆಚ್ಚುಗೆ ಸಿಕ್ಕಿದೆ. ಕಾಂಗ್ರೆಸ್ ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.



