ಎಲ್ಲ ಅಸಂಘಟಿತ ಕಾರ್ಮಿಕರಿಗೆ ಪರಿಹಾರಧನ ತಲುಪಿಸಲು ಕ್ರಮ; ಬೆಳಗಾವಿ ಡಿ.ಸಿ ಸೂಚನೆ

ಬೆಳಗಾವಿ: ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸರಕಾರ ಘೋಷಿಸಿರುವ ಪರಿಹಾರಧನವನ್ನು ಎಲ್ಲ ಅರ್ಹ ಕಾರ್ಮಿಕರಿಗೆ ತಲುಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅಸಂಘಟಿತ ಕಾರ್ಮಿಕರಿಗೆ ಪರಿಹಾರಧನ ನೀಡುವ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ ವೇಳೆ ಸೂಚನೆ ನೀಡಿದ್ದಾರೆ.
ಅಸಂಘಟಿತ ಕಾರ್ಮಿಕರಾದ ಕ್ಷೌರಿಕರು, ಅಗಸರು, ಟೈಲರ್, ಹಮಾಲಿ, ಚಿಂದಿ ಆಯುವವರು, ಕುಂಬಾರರು, ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್, ಕಮ್ಮಾರರು, ಗೃಹ ಕಾರ್ಮಿಕ(ಮನೆಗೆಲಸದವರು)ರು ಹಾಗೂ ಚಮ್ಮಾರರಿಗೆ 2 ಸಾವಿರ ರೂಪಾಯಿ ಪರಿಹಾರಧನವನ್ನು ಸರಕಾರ ಘೋಷಿಸಿದೆ.
ಅರ್ಹ ಕಾರ್ಮಿಕರು ಅಗತ್ಯ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.11 ವಲಯದ ಅಸಂಘಟಿತ ಕಾರ್ಮಿಕರಿಗೆ ಸರಕಾರ ಘೋಷಿಸಿರುವ ನೆರವು ತಲುಪಬೇಕು. ಆಯಾ ಕಾರ್ಮಿಕ ಸಂಘ-ಸಂಸ್ಥೆಗಳು ಅರ್ಹ ಕಾರ್ಮಿಕರು ಆನಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನೆರವಾಗಬೇಕು.ಸರಕಾರದ ಮಾರ್ಗಸೂಚಿ ಅನುಸರಿಸಿ ಎಲ್ಲ ಅರ್ಹ ಕಾರ್ಮಿಕರಿಗೆ ನೆರವು ತಲುಪಿಸಲು ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ಸೂಚನೆ ನೀಡಿದರು.
ಅರ್ಜಿ ಸಲ್ಲಿಸುವ ಕಾರ್ಮಿಕರಿಗೆ ಸ್ವಯಂಘೋಷಣೆ ಪತ್ರ ಆಧರಿಸಿ ಸಂಬಂಧಿಸಿದ ಅಧಿಕಾರಿಗಳು ಉದ್ಯೋಗ ದೃಢೀಕರಣ ಪತ್ರವನ್ನು ನೀಡಲಿದ್ದಾರೆ. ವಿನಾಕಾರಣ ಸತಾಯಿಸದಂತೆ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು.ಸ್ಥಳೀಯವಾಗಿ ಕೆಲಸ ಮಾಡುವ ಕಾರ್ಮಿಕರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇರುತ್ತದೆ. ಇದನ್ನು ಆಧರಿಸಿ ಅವರು ಉದ್ಯೋಗ ದೃಢೀಕರಣ ಪತ್ರ ನೀಡಬೇಕು.ಉದ್ಯೋಗ ದೃಢೀಕರಣ ಪತ್ರ ನೀಡಲು ಸತಾಯಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ಎಚ್ಚರಿಕೆಯನ್ನು ನೀಡಿದರು.
ಕಾರ್ಮಿಕರಿಗೆ ತಕ್ಷಣವೇ ಉದ್ಯೋಗ ಪ್ರಮಾಣಪತ್ರ ನೀಡಬೇಕು ಎಂದು ಸಂಬಂಧಿಸಿದ ಕಂದಾಯ ಹಾಗೂ ಪಂಚಾಯತ್ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.ಸಂಬಂಧಿಸಿದ ಕಾರ್ಮಿಕರ ಸಂಘಟನೆಗಳು ಒಂದೇ ಕಡೆ ಅರ್ಜಿ ಸಲ್ಲಿಕೆಗೆ ವ್ಯವಸ್ಥೆ ಮಾಡಬೇಕು. ಆಗ ಕಾರ್ಮಿಕ ಇಲಾಖೆಯ ಅಧಿಕಾರಿಗಳೇ ಅಂತಹ ಸ್ಥಳಗಳಿಗೆ ಬಂದು ನೆರವು ನೀಡಲಿದ್ದಾರೆ. ಇನ್ನು ಸರಕಾರದ ಆರ್ಥಿಕ ನೆರವು ಅರ್ಹ ಕಾರ್ಮಿಕರಿಗೆ ತಲುಪಿಸಲು ಕಾರ್ಮಿಕ ಇಲಾಖೆಯು ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಏಜೆಂಟರು ಈ ಪ್ರಕ್ರಿಯೆಯಲ್ಲಿ ಮಧ್ಯಸ್ಥಿಕೆಯನ್ನು ವಹಿಸದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆರರು ಸಭೆಯ ಉಪಸ್ಥಿತರಿದ್ದರು.




