ಪುನೀತ್ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು : ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅರಮನೆಯಲ್ಲಿ ನಡೆದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು. ಹಾಗೆಯೇ ಡಾ.ರಾಜ್ ಕುಮಾರ್ ಸ್ಮಾರಕದಂತೆಯೇ ಅಪ್ಪು ಸ್ಮಾರಕ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.
ನಾನು ಬಾಲ್ಯದಿಂದ ಪುನೀತ್ ರಾಜ್ ಕುಮಾರ್ ನೋಡಿದ್ದೇನೆ. ಅವರು ನಮಗೆ ಬಹಳ ಆತ್ಮೀಯರಾಗಿದ್ದರು. ಬಾಲ ನಟನಿದ್ದಾಗಲೇ ರಾಷ್ಟ್ರಪ್ರಶಸ್ತಿ ಪಡೆದಿದ್ದರು. ಇಂತಹ ಕಾರ್ಯಕ್ರಮ ಮಾಡುತ್ತೇವೆ ಎಂದುಕೊಂಡಿರಲಿಲ್ಲ. ರಾಜ್ ಕುಮಾರ್ ಅವರ ವಿನಯ ಅಪ್ಪುನಲ್ಲಿ ಕಾಣುತ್ತಿದ್ದವು. ಅಪ್ಪು ಪರೋಪಕಾರಿ ಕೆಲಸ ಯಾರಿಗೂ ತಿಳಿದಿಲ್ಲ. ಪುನೀತ್ ಸಹಾಯ ಮಾಡಿದರೇ ಎಂದೂ ತೋರಿಸಿಕೊಳ್ಳುತ್ತಿರಲಿಲ್ಲ. ಎಂದು ಸಿಎಂ ಬೊಮ್ಮಾಯಿ ಸ್ಮರಿಸಿದರು.
