ಮುಸ್ಲಿಂರ ವಿರುದ್ಧ ಪ್ರತಾಪ್ ಸಿಂಹ ಹೇಳಿಕೆಗೆ ಎಸ್ಡಿಪಿಐ ವಿರೋಧ

ಮಡಿಕೇರಿ : ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಮುಸ್ಲಿಮರಿಗೆ ಹಂದಿ ಮಾಂಸ ಬಡಿಸಲಿ ಎಂದು ಕೊಡಗು, ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆ ಖಂಡನೀಯವೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಅಸಮಾಧಾನ ವ್ಯಕ್ತಪಡಿಸಿದೆ.
ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೊಡ್ಲಿಪೇಟೆ ಹಾಗೂ ಜಿಲ್ಲಾಧ್ಯಕ್ಷ ಮುಸ್ತಫ ಮುಂದಿನ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕೋಮು ಪ್ರಚೋದನೆಯ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಹಂಸಲೇಖ ಅವರ ವಿಚಾರದಲ್ಲಿ ವಿನಾಕಾರಣ ಮುಸಲ್ಮಾನರ ಹೆಸರನ್ನು ಉಲ್ಲೇಖಿಸಿ ನೀಡಿರುವ ಹೇಳಿಕೆ ಸಂವಿಧಾನ ಬಾಹಿರವಾಗಿರುವುದರಿಂದ ಪ್ರತಾಪ್ ಸಿಂಹ ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.
ಈಗಾಗಲೇ ರಾಜ್ಯದಲ್ಲಿ ಅಶಾಂತಿಯ ವಾತಾವರಣ ಮೂಡುತ್ತಿದ್ದು, ಇದರ ನಡುವೆಯೇ ಈ ರೀತಿಯ ಭಾವನಾತ್ಮಕ ವಿಚಾರಗಳನ್ನು ಕೆಣಕಿ ಮತ್ತಷ್ಟು ಪ್ರಚೋದನೆ ನೀಡುವ ಮೂಲಕ ಶಾಂತಿ ಕದಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ವೈಫಲ್ಯತೆಯನ್ನು ಸರಕಾರದ ಆಡಳಿತ ಕಾಣುತ್ತಿರುವುದರಿಂದಲೇ ಉಪಚುನಾವಣೆಗಳಲ್ಲಿ ಮತದಾರರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಇದನ್ನು ಸಹಿಸಲಾಗದ ಸಂಸದ ಪ್ರತಾಪ್ ಸಿಂಹ ಅವರಂತಹವರು ಕೋಮು ಭಾವನೆ ಕೆರಳಿಸಿ ರಾಜಕೀಯ ಲಾಭ ಪಡೆಯಲು ಹುನ್ನಾರ ನಡೆಸುತ್ತಿದ್ದಾರೆ.
ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ಪ್ರಮುಖರ ಹೆಸರು ಕೇಳಿ ಬರುತ್ತಿರುವುದರಿಂದ ಇದನ್ನು ಮರೆ ಮಾಚಲು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಲಾಗುತ್ತಿದೆ. ಪ್ರತಾಪ್ ಸಿಂಹರಿಗೆ ಬುದ್ದಿ ಹೇಳಬೇಕಾದ ಪಕ್ಷದ ಹೈಕಮಾಂಡ್ ಕೂಡ ಮೌನಕ್ಕೆ ಶರಣಾಗುವ ಮೂಲಕ ಕ್ಷುಲ್ಲಕ ರಾಜಕಾರಣವನ್ನು ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.
ಮುಂದಿನ ಚುನಾವಣೆಗಳಲ್ಲಿ ಕೋಮುವಾದಿಗಳಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಎಸ್ಡಿಪಿಐ ಪ್ರಮುಖರಾದ ಎಂ.ಕೆ.ಮನ್ಸೂರ್, ಉಸ್ಮಾನ್ ಸುಂಟಿಕೊಪ್ಪ ಹಾಗೂ ಹನೀಫ್ ಕೊಂಡಂಗೇರಿ ಉಪಸ್ಥಿತರಿದ್ದರು.




