ಭಟ್ಕಳ : ಅಂಗಡಿಯಲ್ಲಿ ಕುಳಿತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಕಾರವಾರ : ಭಟ್ಕಳ ತಾಲೂಕಿನ ಮುಷಾ ನಗರದ ಬದ್ರಿಯಾ ಕಾಲೋನಿಯ ಅಂಗಡಿಯಲ್ಲಿ ಕುಳಿತ್ತಿದ್ದ ವ್ಯಕ್ತಿ ಮೇಲೆ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಜಾನುವಾರು ಕಳ್ಳತನದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ನಮ್ಮ ಜನರನ್ನು ಹಿಡಿಸಿದ್ದೀಯಾ ? ನಿನ್ನನ್ನು ಕೊಲೆ ಮಾಡಿಯೇ ಹೋಗುತ್ತೇವೆ ಎಂದು ಹೇಳಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಭಟ್ಕಳ ತಾಲೂಕಿನ ಜಾಲಿ ನಿವಾಸಿ ಸದ್ದಾಂಹುಸೇನ್ ಎಂದು ತಿಳಿದು ಬಂದಿದೆ.ಈತ ಬದ್ರಿಯಾ ಕಾಲೋನಿಯಲ್ಲಿರುವ ಕಿರಾಣಿ ಅಂಗಡಿಯಲ್ಲಿ ಕುಳಿತ್ತಿದ್ದ ವೇಳೆ ಕಾರಿನಲ್ಲಿ ಬಂದ ಐದಾರು ಮಂದಿ ಅಪರಿಚಿತ ವ್ಯಕ್ತಿಗಳು ಅವಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ನಂತರ ಹಲ್ಲೆಗೊಳಗಾದ ವ್ಯಕ್ತಿಯನ್ನು ಜಾಲಿ ಕ್ರಾಸ್ ಸಮೀಪದ ಲೈಫ್ ಕೇರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಹಲ್ಲೆಯಿಂದ ಸದ್ದಾಂಹುಸೇನ್ ಕೈ ಕಾಲು,ಹೊಟ್ಟೆ ಹಾಗೂ ಮೈ ಭಾಗದಲ್ಲಿ ಗಾಯಾಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಘಟನೆ ನಡೆದ ಸ್ಥಳದ ಅಕ್ಕಪಕ್ಕದಲ್ಲಿದ್ದ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬಿಸಿದ್ದಾರೆ.ಘಟನೆ ಸಂಬಂಧ ಭಟ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.




