ಎಂಇಎಸ್, ಶಿವಸೇನೆ ಕೃತ್ಯಕ್ಕೆ ಖಂಡನೆ; ಕರ್ನಾಟಕ ರಕ್ಷಣಾ ವೇದಿಕೆಯಿಂದ ಸುವರ್ಣಸೌಧ ಮುತ್ತಿಗೆ

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಹಾಗೂ ಎಂಇಎಸ್ ಮತ್ತು ಶಿವಸೇನೆ ಕಾರ್ಯಕರ್ತರ ಕೃತ್ಯ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸುವರ್ಣಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಮಧ್ಯಾಹ್ನ 12ಗಂಟೆಗೆ ನಡೆಯಲಿರುವ ಪ್ರತಿಭಟನೆಗೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ವಾಹನಗಳ ಮೂಲಕ ಧಾವಿಸುತ್ತಿದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆಯನ್ನು ಭಯತ್ಪಾದಕ ಗುಂಪು ಎಂದು ಕರೆದಿರುವ ಕನ್ನಡ ರಕ್ಷಣಾ ವೇದಿಕೆ ಇದು ನಿರ್ಣಾಯಕ ಹೋರಾಟ ಎಂದು ಹೇಳಿದೆ. ಕರವೇ ನಡೆ ಬೆಳಗಾವಿ ಕಡೆ ಎಂಬ ಘೋಷಣೆಯಡಿ ಸಂಘಟನೆಯ ಕಾರ್ಯಕರ್ತರು ಸುವರ್ಣಸೌಧ ಬಳಿ ಪ್ರತಿಭಟನಾ ಸ್ಥಳದಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮೇಳೈಸತೊಡಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ, ಪ್ರವೀಣ್ ಶೆಟ್ಟಿ ನೇತೃತ್ವದ ಬಣ, ಕರ್ನಾಟಕ ರಣಧೀರರ ಪಡೆ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಎಂಇಎಸ್ ನಿಷೇಧಿಸಬೇಕು ಎಂಬದೂ ಸೇರಿದಂತೆ ತಮ್ಮ ಹಕ್ಕೋತ್ತಾಯಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರವೀಣ್ ಶೆಟ್ಟಿ ನೇತೃತ್ವದ ಕರವೇ ಬಣ, ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಾರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದದರು.
ಇದೇ ವೇಳೆ, ಸಚಿವ ಹಾಲಪ್ಪ ಆಚಾರ್ ಸೇರಿದಂತೆ ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಕೆಲ ಸಚಿವರ ಕಾರನ್ನು ಪ್ರತಿಭಟನಾಕಾರರು ತಡೆದು ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿದರು. ಈ ಸಂಬಂಧ ಸದನದಲ್ಲಿ ಚರ್ಚಿಸುವ ಭರವಸೆ ವ್ಯಕ್ತವಾದ ನಂತರ ಅವರನ್ನು ಹೋಗಲು ಬಿಟ್ಟರು.
