
ನವದೆಹಲಿ: ಹಿರಿಯ ಕಾಂಗ್ರೆಸ್ ಧುರೀಣ ಹಾಗೂ ಕೆಪಿಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕೋವಿಡ್ ದೃಢಪಟ್ಟಿದೆ. ಸುರ್ಜೇವಾಲಾ ಸ್ವತಃ ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನಿನ್ನೆ (ಸೋಮವಾರ) ರಾತ್ರಿ ಸೌಮ್ಯ ಜ್ವರ ಮತ್ತು ಶೀತದಂತಹ ರೋಗಲಕ್ಷಣಗಳನ್ನು ಅನುಭವಿಸಿದ ನಂತರ, ನಾನು ನನ್ನನ್ನು ಪರೀಕ್ಷಿಸಿಕೊಂಡೆ ಮತ್ತು ಕೋವಿಡ್ ಪಾಸಿಟಿವ್ ಆಗಿದ್ದೇನೆ ಎಂದು ಟ್ವೀಟ್ ನಲ್ಲಿ ಅವರು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ತಮ್ಮನ್ನು ತಾವು ಪರೀಕ್ಷಿಸಿಕೊಳ್ಳುವಂತೆ ನಾನು ವಿನಂತಿಸುತ್ತೇನೆ ಎಂದು ಸುರ್ಜೇವಾಲ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ವರದಿಯಾಗುತ್ತಿದ್ದು, ಮಂಗಳವಾರ ಒಂದೇ ದಿನ 5 ಸಾವಿರಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ರಾಷ್ಟ್ರದ ರಾಜಧಾನಿಯಲ್ಲಿ ವರದಿಯಾಗಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿ ಘಟಕದ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಕೂಡ ಕೋವಿಡ್ ಗೆ ಈಡಾಗಿರುವುದನ್ನು ಇಲ್ಲಿ ಸ್ಮರಿಸಬಹುದು.
