Lock down : ಸಂಪೂರ್ಣ ಲಾಕ್ ಡೌನ್ ಮಾಡುವ ಚಿಂತನೆ ಸರ್ಕಾರಕ್ಕೆ ಇಲ್ಲ: ಸಚಿವ ಡಾ.ಕೆ ಸುಧಾಕರ್

ಬೆಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ವಿಚಾರವನ್ನೇ ಸರ್ಕಾರ ಮಾಡಿಲ್ಲ. ಲಾಕ್ ಡೌನ್ ಎಂಬುದು ಕಳೆದು ಹೋಗಿರುವ ನೀತಿ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಪ್ರಕರಣ ಹೆಚ್ಚಳವಾಗುವುದನ್ನ ತಡೆಯಲಾಗಲ್ಲ. ಆದರೆ ಕೋವಿಡ್ ನಿಯಂತ್ರಣ ಮಾಡಲು ಸಾಧ್ಯವಿದೆ. ಆಗ ಅನುಭವ ಇಲ್ಲದ ಹಿನ್ನೆಲೆ ಲಾಕ್ ಡೌನ್ ಮಾಡಲಾಗಿತ್ತು. ಆದರೆ ಈಗ ಎರಡೂ ಅಲೆಯಿಂದ ಅನುಭವವಿದೆ. ಹೀಗಾಗಿ ಕೋವಿಡ್ ಹರಡದಂತೆ ತಡೆಯುತ್ತೇವೆ ಎಂದು ತಿಳಿಸಿದರು.
ಬೆಂಗಳೂರು ನಗರ, ಮೈಸೂರು, ಮಂಡ್ಯ, ಉಡುಪಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕೊರೊನಾ 3 ನೇ ಅಲೆಯಲ್ಲಿ ಒಮಿಕ್ರಾನ್ ವೇಗವಾಗಿ ಹರಡುತ್ತಿದೆ. 2 ಡೋಸ್ ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಮಾಹಿತಿ ನೀಡಿದೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಎರಡು ಡೋಸ್ ಲಸಿಕೆ ಪಡೆದರೆ ಸಾವು ನೋವು ತಪ್ಪಿಸಬಹುದು ಎಂದರು.
