ಕೋವಿಡ್: ಮುಖ್ಯಮಂತ್ರಿಗಳ ಜತೆ ಪ್ರಧಾನಿ ಸಂಜೆ ಸಂವಾದ
ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಈ ಸಭೆ ಸಂಜೆ 4 ಗಂಟೆಗೆ ನಡೆಯಲಿದೆ. ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಈ ವರ್ಷ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಕಳೆದ ಒಂದು ವಾರದಿಂದ ದೇಶಾದ್ಯಂತ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗುತ್ತಿರುವುದು ಕಳವಳಕಾರಿಯಾಗಿದೆ.
ಸಾಮಾನ್ಯ ನೆಗಡಿಯನ್ನು ಲಘುವಾಗಿ ಪರಿಗಣಿಸುವಂತಿಲ್ಲ ಎಂದು ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್ ಅವರು ಎಚ್ಚರಿಕೆ ನೀಡಿದ್ದು ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಅನಿವಾರ್ಯ ಎಂಬ ಸಲಹೆ ಹಿನ್ನೆಲೆಯಲ್ಲಿ ಪ್ರಧಾನಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಸದ್ಯ ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ವರದಿಯಾಗಿದೆ. ದಿನದ ಪಾಸಿಟಿವಿಟಿ ದರ ಶೇಕಡ 11 ಕ್ಕೆ ಏರಿಕೆಯಾಗಿದೆ.
