Breaking NewsLatestಜಿಲ್ಲಾ ಸುದ್ದಿಮೆಟ್ರೋರಾಜ್ಯಸುದ್ದಿ
ಶಾಲೆ-ಕಾಲೇಜುಗಳಲ್ಲಿ ಸಹಜಸ್ಥಿತಿಗೆ ಸರ್ಕಾರ ಬದ್ಧ: ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ ಬುಧವಾರದಿಂದ ಎಲ್ಲಾ ಶಾಲಾ-ಕಾಲೇಜುಗಳು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ, ಮುಂಜಾಗರೂತಾ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಯಾವುದೇ ಆತಂಕ ಮತ್ತು ಭಯವಿಲ್ಲದೆ ಪಠ್ಯ ಚಟುವಟಿಕೆ ಗಳಲ್ಲಿ ತೊಡಗಿಕೊಳ್ಳಬೇಕು ಎಂದು ಮನವಿ ಮಾಡಿದರು.
ಕೇವಲ ಬೆರೆಣಿಕೆಯಷ್ಟು ವಿದ್ಯಾರ್ಥಿಗಳು ಹಿಜಾಬ್ ಧರಿಸಿಯೇ ಶಾಲೆಗೆ ಬರುತ್ತೇವೆ ಎಂದಿದ್ದಾರೆ. ಅದು ಅವರ ಸ್ವಾಭಾವಿಕವಾದ ಅಭಿಪ್ರಾಯ ಅಲ್ಲ ಎಂದು ನನ್ನ ಅನಿಸಿಕೆ. ನಾವೆಲ್ಲರೂ ಉಚ್ಚ ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶಕ್ಕೆ ಗೌರವಿಸಬೇಕು. ಅದರಂತೆ ನಡೆದುಕೊಳ್ಳಬೇಕು ಎಂದರು.
ಕೆಲವು ಮತೀಯ ಸಂಘಟನೆಗಳು, ಮುಗ್ದ ವಿಧ್ಯಾರ್ಥಿಗಳನ್ನು ಮುಂದಿಟ್ಟುಕೊಂಡು, ಸಮಾಜ ಹಾಗೂ ಮನಸುಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ, ಅವರನ್ನು ಗುರುತಿಸಿ ತಕ್ಕ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.
