ದೇವಾಲಯಗಳ ಸಮಗ್ರ ಅಭಿವೃದ್ಧಿಗೆ “ದೈವ ಸಂಕಲ್ಪ” ಯೋಜನೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದ ಉತ್ತರ, ದಕ್ಷಿಣ ಹಾಗೂ ಕರಾವಳಿ ಭಾಗದಲ್ಲಿ ದೇವಸ್ಥಾನ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಇದರ ಜೊತೆಗೆ ಸ್ಮಾರಕ ಪ್ರವಾಸೋದ್ಯಮಕ್ಕೂ ಅವಕಾಶವಿರುವುದರಿಂದ ಇದಕ್ಕೆ ಉತ್ತೇಜನ ನೀಡಲು ಎರಡನ್ನೂ ಸಂಯೋಜಿಸಿ ಟೂರಿಸಂ ಸಕ್ರ್ಯೂಟ್ ನಿರ್ಮಿಸುವಂತೆ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಇಂದು ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಮಗ್ರ ದೇವಸ್ಥಾನಗಳ ನಿರ್ವಹಣಾ ವ್ಯವಸ್ಥೆ ಹಾಗೂ ದೈವ ಸಂಕಲ್ಪ ಯೋಜನೆಗಳನ್ನು (ಐಟಿಎಂಎಸ್) ಲೋಕಾರ್ಪಣೆ ಮಾಡಿ ಮಾತನಾಡುತ್ತಿದ ಅವರು, ದೇವಸ್ಥಾನಗಳಲ್ಲಿ ಸೌಲಭ್ಯಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಐಟಿಎಂಎಸ್ ನ್ನು ಜಾರಿಗೆ ತಂದಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ದೇವಸ್ಥಾನಗಳ ನಿರ್ವಹಣೆ ಬಹಳ ಮುಖ್ಯ. ದೇವಸ್ಥಾನಗಳಿಗೆ ಭೇಟಿ ನೀಡುವವರ ಸಂಖ್ಯೆ ಮುಂತಾದವುಗಳನ್ನು ದಾಖಲಿಸುವ ಪ್ರಯತ್ನವಾಗಬೇಕು. ದೇವಸ್ಥಾನಗಳ ಆಸ್ತಿಗಳ ನಿರ್ವಹಣೆಯನ್ನು ಅತ್ಯಂತ ಸಮರ್ಪಕವಾಗಿ ಮಾಡುವ ಅಗತ್ಯವಿದೆ ಎಂದರು.
ದೇವಸ್ಥಾನಗಳ ಸಮಗ್ರ ಅಭಿವೃದ್ಧಿ ಮಾಡಿ, ಪೂರ್ಣಪ್ರಮಾಣದಲ್ಲಿ ಸ್ಥಳೀಯವಾಗಿ ವ್ಯವಸ್ಥೆ ಮಾಡಿ ಆಡಳಿತ ಸುಧಾರಿಸುವ ಅಗತ್ಯವಿದೆ. ಸಾರ್ವಜನಿಕರ ದೇಣಿಗೆ ಹಾಗೂ ಆಸ್ತಿ ಒಳಗೊಂಡಿರುವುದರಿಂದ ನಿರ್ವಹಣೆಯ ಜೊತೆಗೆ ನಿಯಂತ್ರಣವೂ ಅಗತ್ಯ ಎಂದು ತಿಳಿಸಿದರು.
ದೇವಸ್ಥಾನಗಳ ಸ್ವಚ್ಛತೆಗೆ ಆದ್ಯತೆ:
ದೇವಸ್ಥಾನಗಳ ಸ್ವಚ್ಥತೆಯನ್ನು ಕಾಪಾಡಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿಗಳು ದೇವಸ್ಥಾನಗಳ ಆವರಣಗಳ ವಾತಾವರಣ ಕಲುಷಿತಗೊಳ್ಳದಂತೆ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು ಎಂದರು.
