
ರಾಮನಗರ: ಹೌದು ಇಂತಹದ್ದೊಂದು ಪ್ರಶ್ನೆ ದೇಶದಲ್ಲಿ ಇದೀಗ ಎದ್ದಿದೆ. ವಿದ್ಯಾಭ್ಯಾಸಕ್ಕೆಂದು ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ಹೋಗಿದ್ದ ವಿದ್ಯಾರ್ಥಿಗಳು ಇದೀಗ ರಷ್ಯ ಮತ್ತು ಉಕ್ರೇನ್ ನಡುವಿನ ಯುದ್ಧ ಭೀತಿಯಿಂದಾಗಿ ಭಾರತಕ್ಕೆ ವಾಪಾಸಾಗುತ್ತಿದ್ದಾರೆ. ಜೀವವನ್ನೇನೋ ಉಳಿಸಿಕೊಳ್ಳಬಹುದು ಆದ್ರೆ ಜೀವನದ ಕನಸಾಗಿದ್ದ ವೈದ್ಯಕೀಯ ವಿದ್ಯಾಭ್ಯಾಸ ಮುಂದೇಗೆ ಎಂಬ ಪ್ರಶ್ನೆ ಎದ್ದಿದೆ. ಅದೇ ರೀತಿಯ ಪ್ರಶ್ನೆಯನ್ನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಎತ್ತಿದ್ದಾರೆ.
‘ಆಪರೇಷನ್ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್ʼನಿಂದ ವಿದ್ಯಾರ್ಥಿಗಳನ್ನು ಏರ್ʼಲಿಫ್ಟ್ ಮಾಡಿದೆ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ. ಅದ್ದರಿಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಏನು ಕ್ರಮ ಕೈಗೊಳ್ಳಲಿವೆ ಎನ್ನುವುದನ್ನ ಹೇಳಬೇಕು ಎಂದು ಮಾಜಿ ಸಿ.ಎಂ. ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಕರ್ನಾಟಕದ 800ರಿಂದ 1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್ʼಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ. ಇದಕ್ಕೆ ಪರಿಹಾರವೇನು ಎಂಬ ಪ್ರಶ್ನೆಯನ್ನ ಟ್ವಿಟ್ ಮಾಡುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಕೇಳಿ ಸಲಹೆಯನ್ನೂ ನೀಡಿದ್ದಾರೆ.
ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯ ಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ ಎಂದು ಸಲಹೆ ನೀಡಿದ್ದಾರೆ.
2,65,720 ಕೋಟಿ ರೂ.ಗಳಷ್ಟು ಬಜೆಟ್ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್ ಮೂಲಕ ಶೇಕಡ 50 ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ ಎರಡೂ ಸರಕಾರಗಳು ಅಂತಃಕರಣದಿಂದ ಆಲೋಚಿಸಬೇಕು ಎಂದು ಹೇಳಿದ್ದಾರೆ.
ʼವೈದ್ಯೋ ನಾರಾಯಣೋ ಹರಿಃʼ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ʼಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ.ʼ ಕೇಂದ್ರ-ರಾಜ್ಯ ಸರಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಅಲ್ಲದೇ ನೀಟ್ ಪರೀಕ್ಷಾ ಪದ್ದತಿ ನಿಲ್ಲಲಿ ಎಂದು ಅ್ಯಶ್ ಟ್ಯಾಗ್ ಮಾಡಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರಕಾರದ ನಡೆ ಏನು ಅನ್ನೋದನ್ನ ಕಾದುನೋಡಬೇಕಿದೆ.
