ಕರ್ತವ್ಯಕ್ಕೆ ಗೈರಾಗಿ ಕಾಶ್ಮೀರ್ ಫೈಲ್ಸ್ ಸಿನಿಮಾ ವೀಕ್ಷಣೆ:ಸಿಬ್ಬಂದಿಗಳ ವರ್ತನೆ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರು: ಕಳೆದ ಮೂರು ದಶಕಗಳ ಹಿಂದೆ ಕಾಶ್ಮೀರದಲ್ಲಿ ನಡೆದ ಘಟನೆಯನ್ನು ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಮೂಲಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತೆರೆಗೆ ತಂದಿದ್ದು, ಈ ಚಿತ್ರ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ರಾಜ್ಯದಲ್ಲೂ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಆಡಳಿಯ ಪಕ್ಷವಾದ ಬಿಜೆಪಿ ಈ ಸಿನಿಮಾವನ್ನು ಜನರಿಗೆ ತೋರಿಸುವ ಉತ್ಸಾಹದಲ್ಲಿದೆ. ಈ ಮಧ್ಯೆ ಚಿಕ್ಕಮಗಳೂರು ನಗರಸಭೆಯ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಈ ಸಿನಿಮಾವನ್ನು ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳಿಗೆ ತೋರಿಸುವ ಭರದಲ್ಲಿ ವಿವಾದಕ್ಕೆ ಗುರಿಯಾಗಿದೆ.
ಸರ್ಕಾರಿ ಕಚೇರಿಗೆ ರಜೆ ಇಲ್ಲದಿದ್ದರೂ, ಚಿಕ್ಕಮಗಳೂರು ನಗರಸಭೆಯಲ್ಲಿ ಅಧಿಕಾರಿಗಳ ಕುರ್ಚಿಗಳು, ಡಿ ದರ್ಜೆ ಸಿಬ್ಬಂದಿಗಳ ಕುರ್ಚಿಗಳು ಖಾಲಿ ಖಾಲಿಯಾಗಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು, ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡಲು ಹಾಜರಾಗಿರುವುದಕ್ಕೆ ಸಾರ್ವಜನಿಕರು ಕೆಂಡಾಮಂಡಲಗೊಂಡಿದ್ದರು.
ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರು ಹಾಜರಾಗಿರುವುದನ್ನು ತಿಳಿಸಿದ ಜನರು ಕೆಲಸದ ನಿಮಿತ್ತ ಬಂದು ಕೆಲಸಗಳಾಗದೆ ಕೆಲಕಾಲ ಪರದಾಟ ನಡೆಸಿದರು. ಪರಿಸ್ಥಿತಿಯನ್ನು ಅರಿತು ಸ್ಥಳಕ್ಕೆ ತೆರಳಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಧಿಕಾರಿಗಳ ಈ ವರ್ತನೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಬಳಿಕ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಗೆ ನಗರಸಭೆ ಅಧಿಕಾರಿ, ಸಿಬ್ಬಂದಿಗಳು ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿಯನ್ನು ಸಲ್ಲಿಸಿದರು.ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷ ಡಾ ಕೆ ಪಿ ಅಂಶುಮಂತ್ ಮಾತನಾಡಿ, ಕೆಲಸದ ವೇಳೆಯಲ್ಲಿ ಸಿನಿಮಾ ನೋಡಿರುವುದು ಅಧಿಕಾರಿಗಳಲ್ಲಿರುವ ಬೇಜವಾಬ್ದಾರಿತನವನ್ನು ತೋರಿಸುತ್ತದೆ. ಮೂವ್ ಮೆಂಟ್ ರಿಜಿಸ್ಟರ್ ನಲ್ಲಿ ಸಿಬ್ಬಂದಿ ಸಹಿ ಹಾಕಿ ಕೆಲಸ ಬಿಟ್ಟು ಹೋಗುತ್ತಿದ್ದಾರೆಂದು ಹೇಳಿದರು.
ಈ ನಡುವೆ ಸಿನಿಮಾ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರು, ಚಿತ್ರವನ್ನು ಶ್ಲಾಘಿಸಿದರು. ಇದು ಜಮ್ಮು ಮತ್ತು ಕಾಶ್ಮೀರದಲ್ಲಿ “ವಾಸ್ತವ ಘಟನೆಗಳನ್ನು” ಆಧರಿಸಿದೆ ಎಂದು ಹೇಳಿದರು. ಅಲ್ಲದೆ, 370 ನೇ ವಿಧಿಯನ್ನು ರದ್ದುಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದರು.
