ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಜಾಕ್ಕೆ ಪ್ರಿಯಾಂಕ್ ಖರ್ಗೆ ಆಗ್ರಹ

ಕಲಬುರಗಿ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ. ಡೆತ್ ನೋಟ್ ನಲ್ಲಿ ಸಚಿವ ಈಶ್ವರಪ್ಪನವರ ಹೆಸರು ಉಲ್ಲೇಖವಿರುವುದರಿಂದ ಅವರನ್ನ ವಜಾ ಮಾಡಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರನ್ನು ನೇಮಿಸಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ಈ ಮುಂಚೆ ಸರ್ಕಾರ 40 % ಕಮಿಷನ್ ಬೇಡಿಕೆ ಇಟ್ಟಿದೆ. ಈ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಆದರೂ ಕೂಡಾ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಪ್ರತಿಯೊಂದಕ್ಕೂ ಸರ್ಕಾರ ದಾಖಲೆ ಕೇಳುತ್ತಿದೆ ಈಗ ಒಂದು ಜೀವ ಹೋಗಿದೆ ಇದಕ್ಕಿಂತ ಪ್ರೂಫ್ ಬೇಕಾ? ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.
‘ನಾ ಖಾವುಂಗ.. ಖಾನೇಕೋಬಿ ನಹಿ ದೇವುಂಗ’ ಎಂದು ಪ್ರಧಾನಿ ಹೇಳಿದ್ದರು. ಆದರೆ ಸರ್ಕಾರದಲ್ಲಿ ಎಲ್ಲವು ನಡೆಯುತ್ತಿದೆ. ಈ ವಿಷಯವನ್ನ ಬೆಳಗಾವಿ-ಬೆಂಗಳೂರು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೆವು. ಆದರೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ದುರ್ದೈವವೆಂದರೆ ಚರ್ಚೆ ಮಾಡಲು ನಿಮ್ಮ ಹತ್ರ ಪ್ರೂಫ್ ಇದೆಯಾ ಅಂತಾ ಕೇಳಿದ್ದರು” ಎಂದರು.
ಸಿಎಂ ಬಸವರಾಜ್ ಬೊಮ್ಮಾಯಿ ಆರ್ಎಸ್ಎಸ್ ಕೈಗೊಂಬೆಯಾಗಿದ್ದು ಅಸಹಾಯಕರಾಗಿದ್ದಾರೆ. ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದವರ ಮೇಲೆ ಕ್ರಮ ತೆಗೆದುಕೊಳ್ಳದ ಸಿಎಂ, ಓರ್ವ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳುತ್ತಾರಾ? ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನರ ಹಿತ ಬಲಿ ಕೊಡುತ್ತಿದ್ದಾರೆ ಎಂದು ದೂರಿದರು.
