ಧಾರವಾಡದಲ್ಲಿ ಪಿಎಸ್ಐ ಆಕಾಂಕ್ಷಿಗಳ ಆಕ್ರೋಶ: ನಿಷ್ಪಕ್ಷಪಾತ ತನಿಖೆಗೆ ಅಗ್ರಹ

ಧಾರವಾಡ: ಇತ್ತೀಚೆಗೆ ರಾಜ್ಯದಲ್ಲಿ ನಡೆದ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದನ್ನು ಖಂಡಿಸಿ ಹಾಗೂ ಅಕ್ರಮ ಕುರಿತು ನಿಷ್ಪಕ್ಷಪಾತ ತನಿಖೆಗೆ ಅಗ್ರಹಿಸಿ, ಧಾರವಾಡದಲ್ಲಿ ನೂರಾರು ಪಿಎಸ್ಐ ಆಕಾಂಕ್ಷಿಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ನೂರಕ್ಕೂ ಹೆಚ್ಚು ಪಿಎಸ್ಐ ಅಕಾಂಕ್ಷಿಗಳು ರಾಜ್ಯ ಸರ್ಕಾರದ ವಿರುದ್ಧ ಹಾಗೂ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿರುವವರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.
ರಾಜ್ಯದ ಪೊಲೀಸ್ ಇಲಾಖೆ ದೇಶದಲ್ಲಿಯೇ ತನ್ನದೆಯಾದ ಗೌರವವನ್ನು ಹೊಂದಿದೆ. ಆದರೆ ಇತ್ತೀಚೆಗೆ ರಾಜ್ಯದಲ್ಲಿ ನಡೆದ 545 ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬಯಲಿಗೆ ಬಂದಿದೆ. ಇದರಿಂದಾಗಿ ಈಗ ರಾಜ್ಯ ಪೊಲೀಸ್ ಇಲಾಖೆಯನ್ನು ಸರ್ವಾಜನಿಕರು ಅನುಮಾನದಿಂದ ನೋಡುವಂತಾಗಿದೆ. ಸಮಾಜದಲ್ಲಿ ಭ್ರಷ್ಟಾಚಾರ, ಅನ್ಯಾಯ ಹಾಗೂ ಅನಾಚಾರಗಳಿಗೆ ಕಡಿವಾಣ ಹಾಕಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕಾದ ಇಲಾಖೆಯಲ್ಲಿ ಇಂತಹ ಅಕ್ರಮ ನಡೆದಿರುವುದು ನಿಜಕ್ಕೂ ಇಲಾಖೆಗೆ ಕಪ್ಪು ಚುಕ್ಕೆ ತರುವ ಪ್ರಕರಣವಾಗಿದೆ. ಹಾಗಾಗಿ ರಾಜ್ಯದ ಗೃಹ ಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಜೊತೆಗೆ ಪ್ರಕರಣದ ಕುರಿತು ನಿಷ್ಪಕ್ಷಪಾತವಾದ ತನಿಖೆ ನಡೆಸಬೇಕು ಎಂದು ಅಗ್ರಹಿಸಿದರು.
