ವ್ಯಾಕ್ಸಿನ್ ವಿಚಾರದಲ್ಲಿ ಪ್ರಧಾನಿಯನ್ನು ಟೀಕಿಸಿದರೆ ನಿಮಗೆ ಒಳ್ಳೆಯದಾಗುವುದಿಲ್ಲ: ಸಚಿವ ಮಧುಸ್ವಾಮಿ

ಉಡುಪಿ: ವ್ಯಾಕ್ಸಿನ್ ವಿಚಾರದಲ್ಲಿ ಮೋದಿಯನ್ನ ಟೀಕೆ ಮಾಡಿದರೆ ನಿಮಗೆ ಒಳ್ಳೆಯದಾಗುವುದಿಲ್ಲ. ದೇಶದಲ್ಲಿ 80 ಕೋಟಿ ಜನಕ್ಕೆ ಉಚಿತ ಲಸಿಕೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಕಾನೂನು ಮತ್ತು ಸಂಸದೀಯ ಸಚಿವ ಜೆ ಸಿ ಮಾಧುಸ್ವಾಮಿ ತಿರುಗೇಟು ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ 2000 ಕೋಟಿ ರುಪಾಯಿ ತೆಗೆದಿಟ್ಟಿದೆ.
ಡಿಕೆ ಶಿವಕುಮಾರ್ ಪಾಪದ ಮಾತಿನಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ಟೀಕೆ ಮಾಡುವುದನ್ನು ಮಾಡಿ, ಅದು ನಿಮ್ಮ ಡ್ಯೂಟಿ. ವಿರೋಧ ಪಕ್ಷದಲ್ಲಿ ನನಗಿಂತ ಚೆನ್ನಾಗಿ ಕೆಲಸ ಮಾಡಿದವರು ಯಾರು ಇಲ್ಲ. ನೈಸರ್ಗಿಕ ಆಪತ್ತಿನ ಕಾಲದಲ್ಲಿ ಎಲ್ಲವನ್ನು ಟೀಕೆ ಮಾಡಬಾರದು ಎಂದರು.
ವ್ಯಾಕ್ಸಿನ್ ಉತ್ಪಾದನೆ ಮಾಡಲು ಕಂಪನಿಯವರಿಗೂ ಕಾಲಾವಕಾಶ ಬೇಕು. ಮುಂದಿನ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಲಸಿಕೆ ಅಭಿಯಾನ ಮುಗಿಯುತ್ತದೆ. ಇದು ಡಿಕೆ ಶಿವಕುಮಾರ್ ಅವರ ಬದುಕಿನ ಪ್ರಶ್ನೆ, ಹೀಗಾಗಿ ವಿರೋಧ ಮಾಡುತ್ತಾರೆ ಎಂದು ಸಚಿವ ಕೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ಬಿಜೆಪಿಗೆ ಯಾರಾದರೂ ಬರುವುದಿದ್ದರೆ ಬನ್ನಿ. ಬೇರೆ ಪಕ್ಷದಿಂದ ಬಿಜೆಪಿಗೆ ಬರುವುದಾದರೆ ಸ್ವಾಗತ. ವಿಸ್ತರಣೆ ರಾಜಕೀಯ ಎಲ್ಲಾ ಪಕ್ಷಗಳ ಉದ್ದೇಶ ಆಗಿರುತ್ತದೆ. ಕಾಂಗ್ರೆಸ್ ನಿಂದ ಯಾರಾದರೂ ಬರುವವರಿದ್ದರು ನಾವು ಸ್ವಾಗತಿಸುತ್ತೇವೆ ಎಂದರು.
ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧ ಅಲ್ಲ
ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧ ಅಲ್ಲ. ಹೀಗೆಂದು ಸುಪ್ರೀಂಕೋರ್ಟ್ ಹೇಳಿದೆ. ಆ ಹೆಣ್ಣುಮಗಳ ವರ್ತನೆ ನೋಡಿದರೆ ಇಚ್ಛೆಪಟ್ಟು ಹೋಗಿದ್ದಾರೆ ಅನ್ನುವ ಭಾವನೆ ಬರುತ್ತದೆ. ಹಾಗಾಗಿ ರಮೇಶ್ ಜಾರಕಿಹೊಳಿಗೆ ಶಿಕ್ಷೆ ಆಗಲಾರದು ಅನಿಸುತ್ತದೆ. ಎಲ್ಲವನ್ನೂ ಎದುರಿಸಲೇಬೇಕು. ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗ ಯಾರನ್ನೂ ದೂರಲು ಸಾಧ್ಯವಿಲ್ಲ. ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಹೇಳಿದರು.
