ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ

ಬೆಂಗಳೂರು : ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಥಾವರ್ ಚಂದ್ ಗೆಹ್ಲೋಟ್ ಅವರು, ಇಂದು ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವಿಕರಿಸಿದರು.
ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು. ನೂತನ ರಾಜ್ಯಪಾಲರು ಹಿಂದಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕಾದ ಸಮಾರಂಭದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ರುಢಾಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಅಲಂಕೃತ ವೇದಿಕೆಯಲ್ಲಿ ನೂತನ ರಾಜ್ಯಪಾಲರ ಜೊತೆಗೆ ವೇದಿಕೆಯನ್ನು ಹಂಚಿಕೊಂಡಿದ್ದರು. ಅಲ್ಲದೆ, ನೂತನ ರಾಜ್ಯಪಾಲರು ಪ್ರಮಾಣ ವಚನ ಸ್ವೀಕರಿಸಿದೊಡನೆಯೇ ಪುಷ್ಪಗುಚ್ಛ ನೀಡಿ ಅಭಿನಂದಿಸಿ ಶುಭ ಹಾರೈಸಿದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ,ಡಿಸಿಎಂ ಅಶ್ವಥ್ ನಾರಾಯಣ್, ಸಚಿವರಾದ ಈಶ್ವರಪ್ಪ, ಸುಧಾಕರ್, ಮುರುಗೇಶ್ ನಿರಾಣಿ ಮತಿತರರು ಉಪಸ್ಥಿತರಿದ್ದರು.
ಈ ಮುನ್ನ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ರಾಷ್ಟ್ರಪತಿ ಅವರಿಂದ ಸ್ವೀಕೃತವಾದ ನೇಮಕಾತಿ ಪತ್ರವನ್ನು ವಾಚಿಸಿದರು
