ಸಿಎಂ ಯಡಿಯೂರಪ್ಪ ಬದಲಾವಣೆಗೆ ಇದು ಸೂಕ್ತ ಕಾಲವಲ್ಲ: ಸಿದ್ದಲಿಂಗ ಸ್ವಾಮೀಜಿ

ಬೆಂಗಳೂರು : ಸಿಎಂ ಯಡಿಯೂರಪ್ಪ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಪೂರ್ಣಾವಧಿ ಸಿಎಂ ಆಗಿರಬೇಕೆಂಬುದು ಎಲ್ಲ ಮಠಾಧೀಶರ ಆಶಯವಾಗಿದೆ. ಈ ಸಂದರ್ಭದಲ್ಲಿ ಸಿಎಂ ಬದಲಾಯಿಸುವುದು ಸೂಕ್ತವಲ್ಲ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಧು-ಸಂತರಿಗೆ ಬೇರೆ ಯಾವುದೇ ಉದ್ದೇಶ ಇಲ್ಲ. ಸಿಎಂ ಬದಲಾವಣೆಯಿಂದ ಸುಭದ್ರ ಸರ್ಕಾರ ನೀಡಲಾಗಲ್ಲ. ಬಿಎಸ್ವೈ ಪೂರ್ಣಾವಧಿ ಸಿಎಂ ಆಗಲಿ ಎಂಬುದು ಅಪೇಕ್ಷೆಯಾಗಿದೆ. 75 ವರ್ಷ ದಾಟಿದ ಯಾರಿಗೂ ಆಡಳಿತಕ್ಕೆ ಅವಕಾಶ ಕೊಟ್ಟಿಲ್ಲ. ಆದರೆ, ನನಗೆ ಅವಕಾಶ ಕೊಟ್ಟಿದ್ದಾರೆಂದು ಬಿಎಸ್ವೈ ಹೇಳಿದ್ದಾರೆ. ರಾಜೀನಾಮೆ ಬಗ್ಗೆ ಕೇಳಿದಾಗ ಬಿಎಸ್ವೈ ಏನನ್ನೂ ಹೇಳಿಲ್ಲ ಎಂದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು. ಅದನ್ನು ನಾವು ಪ್ರಶ್ನಿಸುವುದಿಲ್ಲ. ಈಗ ಬಿಎಸ್ವೈ ಪೂರ್ಣ ಅವಧಿಗೆ ಸಿಎಂ ಆಗಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
