ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿ – ಮಾಚಕನೂರ ದೇಗುಲ ಜಲಾವೃತ

ಬಾಗಲಕೋಟೆ: – ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ಸುರಿಯುತ್ತಿರೋ ರಣ ಮಳೆಗೆ ಬಾಗಲಕೋಟೆ ಜಿಲ್ಲೆಯ ತ್ರಿವಳಿ ನದಿಗಳು ಉಕ್ಕಿಹರಿಯುತ್ತಿವೆ. ಅದ್ರಲ್ಲೂ ಘಟಪ್ರಭಾ ನದಿಗೆ ಹೆಚ್ಚಿನ ಪ್ರಮಾಣ ನೀರು ಹರಿದು ಬರ್ತಿದೆ. ಹೀಗಾಗಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ 30 ಗ್ರಾಮಗಳಿಗೆ ಪ್ರವಾಹ ಭೀತಿ ಶುರುವಾಗಿದೆ.
ಈಗಾಗಲೇ ಮಾಚಕನೂರು ಗ್ರಾಮದ ಹೊಳೆಬಸವೇಶ್ವರ ಐತಿಹಾಸಿಕ ದೇವಸ್ಥಾನ ಜಲಾವೃತವಾಗಿದೆ. ದೇವಸ್ಥಾನದ ಆವರಣದಲ್ಲಿ ಎರಡ್ಮೂರು ಅಡಿಯಷ್ಟು ನೀರು ನಿಂತಿದೆ. ಇನ್ನು ನದಿದಡದ ಜಮೀನುಗಳಿಗೆ ನೀರು ನುಗ್ಗಿ, ಅಪಾರ ಪ್ರಮಾಣದ ಕಬ್ಬಿನ ಬೆಳೆ ನೀರಲ್ಲೇ ನಿಂತಿವೆ. ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿ ಕಂಡು ರೈತರು ತಮ್ಮ ತಮ್ಮ ಪಂಪ್ ಸೆಟ್ ಗಳನ್ನು ಹೊರಗಡೆ ತೆಗೆದುಕೊಂಡು ಹೋಗುತ್ತಿದ್ದಾರೆ.
ಬೆಳಗಾವಿ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್ ಅಪಾರ ಪ್ರಮಾಣದ ನೀರಿದ್ದು.6ಟಿಎಂಸಿ ಸಂಗ್ರಹಣಾ ಸಾಮರ್ಥ್ಯದ ಹಿಪ್ಪರಗಿ ಬ್ಯಾರೇಜ್ ನಲ್ಲಿ 2 ಲಕ್ಷ 18 ಸಾವಿರ ಒಳ ಹೊರ ಹರಿವಿದ್ದು, 2 ಲಕ್ಷ 17 ಸಾವಿರ ಕ್ಯೂಸೆಕ್ ಹೊರ ಹರಿವಿದೆ. ಹೀಗಾಗಿ ನದಿ ಪಾತ್ರದಲ್ಲಿರುವ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.




