ಕೇಂದ್ರದಿಂದ ರಾಜ್ಯದ ಜಿಎಸ್ಟಿ ಪಾಲು ಪಡೆಯಲು ಯತ್ನ: ಬೊಮ್ಮಾಯಿ

ಬೆಂಗಳೂರು: ಕೇಂದ್ರ ಸರ್ಕಾರದೊಡನೆ ಪ್ರತ್ಯೇಕವಾಗಿ ಚರ್ಚಿಸಿ ರಾಜ್ಯದ ತೆರಿಗೆ ಪಾಲನ್ನು ಪಡೆದುಕೊಳ್ಳಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾರವಾರ ಜಿಲ್ಲೆ ಪ್ರವಾಸಕ್ಕೂ ಮುನ್ನ ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ 18 ಸಾವಿರ ಕೋಟಿ ರೂಪಾಯಿ ಜಿಎಸ್ ಟಿ ತೆರಿಗೆ ಪರಿಹಾರದ ಕೊರತೆ ಇದೆ. ಕಳೆದ ಬಾರಿ 12 ಸಾವಿರ ಕೋಟಿ ರೂಪಾಯಿ ರಾಜ್ಯದ ಸಾಲವನ್ನು ಸೆಸ್ ಮೂಲಕ ಕೇಂದ್ರ ಪಾವತಿಸಿತ್ತು. ಈ ಬಾರಿಯೂ ಅದೇ ರೀತಿ ಮಾಡಲು ಒಪ್ಪಿದೆ ಎಂದರು.
ಶುಕ್ರವಾರ ದೆಹಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಿದ್ದೇನೆ, ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಂಪುಟ ರಚನೆ ಕುರಿತು ಈ ಬಾರಿ ಅಲ್ಲದಿದ್ದರೂ ಮುಂದಿನ ದೆಹಲಿ ಭೇಟಿ ಸಂದರ್ಭದಲ್ಲಿ ಪಕ್ಷ ವರಿಷ್ಠರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಸಂಪುಟ ರಚನೆ ಸಂದರ್ಭದಲ್ಲಿ ಶಾಸಕರ ಒತ್ತಡ ಸಹಜ. ಸಮಯ ನಿಗದಿಯಾದರೆ ಶುಕ್ರವಾರ ಬೆಳಗ್ಗೆಯೇ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ , ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಮತ್ತು ರಾಜ್ಯದ ಸಂಸದರನ್ನು ಭೇಟಿ ಮಾಡಿ ನೆನೆಗುದಿಗೆ ಬಿದ್ದಿರುವ ರಾಜ್ಯದ ಯೋಜನೆಗಳ ಶೀಘ್ರ ಮಂಜೂರಾತಿ ಮತ್ತು ಅನುಷ್ಠಾನ ಕುರಿತು ಚರ್ಚಿಸುತ್ತೇನೆ ಎಂದು ತಿಳಿಸಿದರು.
