Breaking NewsLatestಮೆಟ್ರೋ

ರಾಜ್ಯದಲ್ಲಿ ಅತ್ಯಾಧುನಿಕ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಸರ್ಕಾರದ ಬೆಂಬಲ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಉದ್ಯೋಗ ಸೃಜಿಸುವ ಆಭರಣ ಉದ್ದಿಮೆ ಕೌಶಲ್ಯವಿರುವ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಾಗಿ ಆಧುನಿಕ‌ ತಂತ್ರಜ್ಞಾನದಿಂದ ಆಭರಣ ಉತ್ಪಾದನೆಗೆ ಅನುಕೂಲವಾಗುವಂತಹ ಅತ್ಯಾಧುನಿಕ ಜುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಇರುವ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಜುವೆಲ್ಲರಿ ಸಂಸ್ಥೆಗೆ ಸಲಹೆ ನೀಡಿದರು.‌

ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸೌತ್ ಜ್ಯುವೆಲ್ಲರಿ ಷೋ ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ಆಭರಣ ವ್ಯಾಪಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೈಪೋಟಿ ಮಾಡಬೇಕಾದ ಸಂದರ್ಭವಿದೆ. ಗೋಲ್ಡ್ ಕಂಟ್ರೋಲ್ ಕಾಯ್ದೆ ತೆಗೆದುಹಾಕಿದ ನಂತರ ಮುಕ್ತ ವಾತಾವರಣ ನಿರ್ಮಾಣವಾಗಿದೆ. ಚಿನ್ನದ ವ್ಯಾಪಾರ ಉದ್ದಿಮೆಯಾಗಿ ಬೆಳೆದಿದೆ ಎಂದರು.

ಭಾರತೀಯ ಆರ್ಥಿಕತೆಯಲ್ಲಿ ಉಳಿತಾಯ ಸಂಸ್ಕೃತಿ ಇದೆ. ನಮ್ಮ ಜನರ ಉಳಿತಾಯ ಮನೋಭಾವ ಆಭರಣ ಉದ್ದಿಮೆಗೆ ಸಹಕಾರಿಯಾಗಿದೆ. ಬ್ಯಾಂಕ್ ದಿವಾಳಿಯಾದರೂ ಚಿನ್ನ ನಮ್ಮ ಆಪತ್ಭಾಂದವ ಎಂದು ಹೇಳಿದರು.

ಒಡವೆ ಎಂದರೆ ಒಂದು ಆತ್ಮೀಯತೆ. ಆಭರಣದ ವಹಿವಾಟು ಅಂತಃಕರಣವುಳ್ಳ ವ್ಯಾಪಾರ, ಇದು ಬಹಳ ಪುರಾತನ ವೃತ್ತಿಯಾಗಿದ್ದು ಭಾವನಾತ್ಮಕ ಸಂಬಂಧ ಬೆಸೆಯುವಂಥದ್ದು ಎಂದರು. ಆಭರಣ ಮಾಡುವ ಕಲೆ ಸೂಕ್ಷ್ಮವಾದುದು. ಆಭರಣ ತಯಾರಿ ಕರ್ನಾಟಕದ ಪಾರಂಪರಿಕ ಕಲೆಯಾಗಿದ್ದು, ಇದನ್ನು ಉಳಿಸಿ ಬೆಳೆಸಬೇಕು ಎಂದರು.

ಚಿನ್ನದ ವ್ಯಾಪಾರಿಗಳು ಸಮಾಜದ ಗೌರವ ಮತ್ತು ಬಾಂಧವ್ಯ ಕಾಪಾಡುವ ಬಂಧುಗಳು. ದೇಶಕ್ಕೆ ಆದಾಯ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕಲ್ಲದೆ, 2 ನೇ ಮತ್ತು 3 ನೇ ಸ್ತರದ ನಗರಗಳಲ್ಲಿ ವ್ಯಾಪಾರ ವೃದ್ಧಿಸುವಂತೆ ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button