ನಿವೇಶನ ನಿರ್ವಹಣಾ ಶುಲ್ಕದಿಂದ ಕೆಂಪೇಗೌಡ ಬಡಾವಣೆಗೆ ವಿನಾಯ್ತಿ; ಬಿಡಿಎ ಮಹತ್ವದ ನಿರ್ಧಾರ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆಯ ನಿವೇಶನಗಳಿಗೆ ನಿರ್ವಹಣಾ ಶುಲ್ಕವನ್ನು ವಿಧಿಸದಿರಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಬುಧವಾರ ಈ ವಿಷಯ ತಿಳಿಸಿದ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಕೆಂಪೇಗೌಡ ಬಡಾವಣೆಯಲ್ಲಿ ಇನ್ನೂ ಅನೇಕ ಮೂಲಸೌಕರ್ಯಗಳನ್ನು ಕಲ್ಪಿಸುವ ಯೋಜನೆಗಳನ್ನು ನಡೆಸಲಾಗುತ್ತಿದೆ. ಪೂರ್ಣಪ್ರಮಾಣದಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸದಿರುವ ಹಿನ್ನೆಲೆಯಲ್ಲಿ ನಿರ್ವಹಣಾ ಶುಲ್ಕದಿಂದ ವಿನಾಯ್ತಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸದ್ಯದಲ್ಲೇ ನಡೆಯಲಿರುವ ಪ್ರಾಧಿಕಾರದ ಸಭೆಯಲ್ಲಿ ಈ ಸಂಬಂಧ ಘಟನೋತ್ತರ ಮಂಜೂರಾತಿ ನೀಡಲಾಗುತ್ತದೆ ಎಂದು ತಿಳಿಸಿದರು. ಬಿಡಿಎ ಬಳಿ ಸ್ವಚ್ಛತಾ ಸಿಬ್ಬಂದಿ ಇಲ್ಲದಿರುವ ಕಾರಣ ಕೆಲವು ಬಡಾವಣೆಗಳನ್ನು ಬಿಬಿಎಂಪಿ ನಿರ್ವಹಣೆ ಮಾಡುತ್ತಿದೆ. ಬಿಡಿಎ ನಿರ್ವಹಣಾ ಶುಲ್ಕವನ್ನು ನಿವೇಶನಗಳ ಮಾಲೀಕರಿಂದ ಶುಲ್ಕವನ್ನು ಸಂಗ್ರಹಿಸಿ ಬಿಬಿಎಂಪಿಗೆ ನೀಡುತ್ತದೆ. ನಿವೇಶನಗಳ ಸ್ವಚ್ಛತೆ ನಿರ್ವಹಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನಿರ್ವಹಣಾ ಶುಲ್ಕವನ್ನು ವಿಧಿಸಲಾಗುತ್ತಿದೆ. ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ನಿಗದಿಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದ ಅವರು, ಸಾರ್ವಜನಿಕರಿಂದ ಸಂಗ್ರಹಿಸುವ ಶುಲ್ಕವನ್ನು ಬಡಾವಣೆ ಅಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತದೆ ಎಂದು ಹೇಳಿದರು.



