Breaking NewsLatestರಾಷ್ಟ್ರೀಯಸುದ್ದಿ

EWSಗೆ ಶೇ 10ರಷ್ಟು ಮೀಸಲಾತಿ: ತಿದ್ದುಪಡಿ ತಿರಸ್ಕರಿಸಿದ ತಮಿಳುನಾಡು ಸರ್ವಪಕ್ಷಗಳ

ಚೆನ್ನೈ: ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (ಇಡಬ್ಲ್ಯುಎಸ್‌) ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿಯನ್ನು ಶನಿವಾರ ಇಲ್ಲಿ ನಡೆದ ಸರ್ವಪಕ್ಷಗಳ ಸಭೆ ತಿರಸ್ಕರಿಸಿತು.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯು, ‘ಇಡಬ್ಲ್ಯುಎಸ್‌ನವರಿಗೆ ಕೇಂದ್ರ ಸರ್ಕಾರ ನೀಡಿರುವ ಮೀಸಲಾತಿ ಬಡವರಲ್ಲಿ ಜಾತಿ ತಾರತಮ್ಯಕ್ಕೆ ಕಾರಣವಾಗಿದೆ’ ಎಂದು ಪ್ರತಿಪಾದಿಸಿತು.

‘ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಪಕ್ಷಗಳು ಈ ವಿಷಯಕ್ಕೆ ಸಂಬಂಧಿಸಿ ತಮ್ಮ ಬೆಂಬಲ ವ್ಯಕ್ತಪಡಿಸಿದವು’ ಎಂದು ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರು ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಹಾಗೂ ಅದರ ಮಿತ್ರಪಕ್ಷ ಬಿಜೆಪಿ ಈ ಸಭೆಯನ್ನು ಬಹಿಷ್ಕರಿಸಿದ್ದವು. ಅಲ್ಲದೇ, ಈ ತಿದ್ದುಪಡಿಯನ್ನು ವಿರೋಧಿಸಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗುವ ಮರುಪರಿಶೀಲನಾ ಅರ್ಜಿಯಲ್ಲಿ ಈ ಕುರಿತು ದೃಢವಾದ ಅಭಿಪ್ರಾಯಗಳನ್ನು ದಾಖಲಿಸುವಂತೆ ಈ ಎರಡು ಪಕ್ಷಗಳು ಒತ್ತಾಯಿಸಿವೆ.

ಇಡಬ್ಲ್ಯುಎಸ್‌ನವರಿಗೆ ಶೇ 10ರಷ್ಟು ಮೀಸಲಾತಿ ನೀಡುವ ಸಂವಿಧಾನದ 103ನೇ ತಿದ್ದುಪಡಿಯನ್ನು ಎತ್ತಿಹಿಡಿದು ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ನ್ಯಾಯಪೀಠ ನ. 8ರಂದು ನೀಡಿರುವ ತೀರ್ಪನ್ನು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸುವುದಾಗಿ ಆಡಳಿತಾರೂಢ ಡಿಎಂಕೆ ಈಗಾಗಲೇ ಘೋಷಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button