ಕೊಲೆಗೆ ಯತ್ನಿಸಿದ ಆರೋಪ ಸಾಬೀತು: ಆರೋಪಿಗೆ 5 ವರ್ಷ ಜೈಲು, 50 ಸಾವಿರ ದಂಡ!

ಧಾರವಾಡ: ನವಲಗುಂದದಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿದ್ದ ಅಪರಾಧಿಗೆ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, 5 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನವಲಗುಂದದ ಹಿರೇಮಠದ ಹತ್ತಿರದ ರಸ್ತೆಯಲ್ಲಿ 2020ರ ಆ. 7 ರಂದು ಹೋಗುತ್ತಿದ್ದ ಬಸವರಾಜ ಸನಾದಿ ಎಂಬಾತನ ಮೇಲೆ ಆರೋಪಿ ಫಕ್ಕೀರಪ್ಪ ಬೆಳವಡಿ ಹಾಗೂ ಇತರರು ಸೇರಿಕೊಂಡು ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿದ್ದಾರೆ ಎಂದು ನವಲಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣ ಕುರಿತು ತನಿಖೆ ಮಾಡಿದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಅದರಂತೆ ವಿಚಾರಣೆ ನಡೆಸಿದ ಧಾರವಾಡ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ಉಮೇಶ ಅಡಿಗ ಅವರು, ಪ್ರಕರಣದಲ್ಲಿ ಆರೋಪಿಯ ವಿರುದ್ಧ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟು, ಅಪರಾಧಿ ಫಕ್ಕೀರಪ್ಪ ಗುಂಡಪ್ಪ ಬೆಳವಡಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿದೆ.
ದಂಡದ ಮೊತ್ತದಲ್ಲಿ 45 ಸಾವಿರ ರೂಪಾಯಿಯನ್ನು ಘಟನೆಯಲ್ಲಿ ಗಾಯಗೊಂಡಿರುವ ಸಂತ್ರಸ್ಥನಿಗೆ ನೀಡಬೇಕು ಎಂದು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ಬಿ.ವಿ. ಪಾಟೀಲ ಅವರು ವಾದ ಮಂಡಿಸಿದರು.
