ಬೆಂಗಳೂರಿಗರೇ ಗಮನಿಸಿ, ನವೆಂಬರ್ 11 ರಂದು ಈ ರಸ್ತೆಗಳಿಗೆ ಇಳಿಯಬೇಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ನವೆಂಬರ್ 11 ) ನಗರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹಲವು ರಸ್ತೆಗಳು ಬಂದ್ ಆಗಲಿವೆ. ಹೀಗಾಗಿ ಬೆಂಗಳೂರು ಸಂಚಾರಿ ಪೊಲೀಸರು ಸಂಚಾರ ಸಲಹೆಯನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಈ ಕೆಳಗಿನ ರಸ್ತೆಗಳಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ನಗರದಲ್ಲಿ ನವೆಂಬರ್ 11ರಂದು ನಡೆಯಲಿರುವ ವಿವಿಧ ಸಮಾರಂಭಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
“ದಿನಾಂಕ 11.11.2022 ರಂದು ಮಾನ್ಯ ಪ್ರಧಾನ ಮಂತ್ರಿಗಳು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರ, ಮಾನ್ಯ ಪ್ರಧಾನ ಮಂತ್ರಿಗಳ ಸಂಚಾರ ಹಾಗೂ ಭದ್ರತಾ ದೃಷ್ಟಿಯಿಂದ ಈ ಕೆಳಕಂಡ ಮಾರ್ಗಗಳಲ್ಲಿ ಬೆಳ್ಳಗೆ 08:00 ಗಂಟೆಯಿಂದ ಮದ್ಯಾಹ್ನ 02:00 ಗಂಟೆಯವರೆಗೆ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಕೆಳಕಂಡ ರಸ್ತೆಗಳನ್ನು ಬಳಸದೇ ಸಂಚಾರ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ” ಎಂದು ಇಲಾಖೆ ಸೂಚನೆ ಹೊರಡಿಸಿದೆ.
*ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ*
ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ ರಸ್ತೆ, ಬಸವೇಶ್ವರ ವೃತ್ತ, ಅರಮನೆ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಬಳ್ಳಾರಿ ರಸ್ತೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಲಿವೇಟೆಡ್ ಕಾರಿಡಾರ್ ರಸ್ತೆ ಬಂದ್ ಆಗಲಿದೆ.
ಶೇಷಾದ್ರಿ ರಸ್ತೆ (ಮಹಾರಾಣಿ ಕಾಲೇಜು ಸೇತುವೆಯಿಂದ ರೈಲು ನಿಲ್ದಾಣದವರೆಗೆ), ಕೆ.ಜಿ. ರಸ್ತೆಯಲ್ಲಿ ಶಾಂತಲಾ ಜಂಕ್ಷನ್ನಿಂದ ಮೈಸೂರು ಬ್ಯಾಂಕ್ ವೃತ್ತದ ವರೆಗೆ, ವಾಟಾಳ್ ನಾಗರಾಜ್ ರಸ್ತೆಯಲ್ಲಿ ಖೋಡೆ ಅಂಡರ್ಪಾಸ್ನಿಂದ ಪಿಎಫ್ ವರೆಗೆ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲಿನ ರಸ್ತೆಗಳು ಬಂದ್ ಇರಲಿವೆ.
ಬೆಳಗ್ಗೆ 7 ರಿಂದ ಮಧ್ಯಾಹ್ನ 3ರ ವರೆಗೆ ಭಾರಿ ವಾಹನಗಳು ನಗರದೊಳಗೆ ಪ್ರವೇಶ ಮಾಡುವಂತಿಲ್ಲ.
