
ನವದೆಹಲಿ: ಕರ್ನಾಟಕ ಸೇರಿದಂತೆ ದೇಶದಲ್ಲಿ ಮತ್ತೊಂದು ಲಸಿಕಾ ಅಭಿಯಾನಕ್ಕೆ ಸೋಮವಾರ ಚಾಲನೆ ದೊರಕಿದೆ. ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕಾಗಿ ಸೋಮವಾರದಿಂದ ಬೂಸ್ಟರ್ ಡೋಸ್ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ 60 ವರ್ಷ ಮೇಲ್ಪಟ್ಟ ವಯೋಮಾನದವರಿಗೆ ಕೇಂದ್ರದ ನಿರ್ದೇಶನದಂತೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.
ಸುಮಾರು ಒಂದು ಕೋಟಿಗೂ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ಎಸ್ಎಂಎಸ್ ಮೂಲಕ ಲಸಿಕೆ ಪಡೆಯುವಂತೆ ಸಂದೇಶ ರವಾನಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಟ್ವೀಟ್ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ನಡೆಯುವ ಉತ್ತರ ಪ್ರದೇಶ ಉತ್ತರ ಖಂಡ, ಮಣಿಪುರ ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ಚುನಾವಣಾ ಸಿಬ್ಬಂದಿಯೂ ಸಹ ಕೇಂದ್ರ ನಿರ್ದೇಶನದಂತೆ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳಬೇಕೆಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗ ಸಹ ಚುನಾವಣೆಯಲ್ಲಿ ಭಾಗವಹಿಸುವ ಎಲ್ಲ ಸಿಬ್ಬಂದಿ ಕಡ್ಢಾಯವಾಗಿ ಬೂಸ್ಟರ್ ಡೋಸ್ ಪಡೆದುಕೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದೆ.
ರಾಜ್ಯದಲ್ಲೂ ಚಾಲನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕಾ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
