ಬಸವರಾಜ ಹೊರಟ್ಟಿ ವಿರುದ್ಧ FIR, 48 ಗಂಟೆಗಳೊಳಗೆ ಕ್ರಮ: ಬೊಮ್ಮಾಯಿ

ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ FIR ದಾಖಲಿಸಿದ್ದ ಪ್ರಕರಣ ಸಂಬಂಧ ಹಿರಿಯ ಅಧಿಕಾರಿಗಳ ವಿರುದ್ಧ 48 ಗಂಟೆಯೊಳಗೆ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ನಲ್ಲಿ ವಿಷಯ ಪ್ರಸ್ತಾಪಿಸಿದ ಜೆಡಿಎಸ್ನ ಎಸ್. ಎಲ್. ಭೋಜೇಗೌಡ ಸಭಾಪತಿ ವಿರುದ್ಧ FIR ದಾಖಲಿಸಿರುವ ಪ್ರಕರಣದಲ್ಲಿ ಕಿರಿಯ ಅಧಿಕಾರಿಗಳ ವಿರುದ್ಧವಷ್ಟೇ ಕ್ರಮ ಕೈಗೊಳ್ಳಲಾಗಿದೆ. ಆದರೆ ಹಿರಿಯ ಅಧಿಕಾರಿಗಳ ವಿರುದ್ಧ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣವೇ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ ಪ್ರಕರಣದ ಕುರಿತು ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದೇನೆ. ಸಭಾಪತಿ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ ಕೊಟ್ಟ ಹಿರಿಯ ಅಧಿಕಾರಿಗಳೂ ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ 48 ಗಂಟೆಗಳಲ್ಲಿ ಕ್ರಮ ಜರುಗಿಸುತ್ತೇನೆ ಎಂದರು.
