ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಶೀಘ್ರ ಜಿಲ್ಲಾಸ್ಪತ್ರೆ: ಡಾ.ಕೆ.ಸುಧಾಕರ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹೊಸ ಜಿಲ್ಲಾಸ್ಪತ್ರೆ ಕಾಮಗಾರಿಯನ್ನು ಅತಿ ಶೀಘ್ರ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಜಿಲ್ಲಾಡಳಿತ ಅಯೋಜಿಸಿದ್ದ 73 ನೇ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೊಸಕೋಟೆಯಲ್ಲಿ ಹೊಸ ತಾಯಿ ಮತ್ತು ಶಿಶು ಆಸ್ಪತ್ರೆ ನಿರ್ಮಾಣಕ್ಕೆ ಶೀಘ್ರ ಚಾಲನೆ ದೊರೆಯಲಿದೆ ಎಂದರು.
ನೆಲಮಂಗಲದಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಸುಸಜ್ಜಿತ ತಾಲೂಕು ಆಸ್ಪತ್ರೆ ನಿರ್ಮಿಸಲಾಗುವುದು. ಮೆಟ್ರೊ ರೈಲ್ವೆ ಬೇಡಿಕೆ ಕೂಡ ಇದ್ದು, ಶೀಘ್ರವೇ ಈ ಭಾಗದ ಜನಪ್ರತಿನಿಧಿಗಳ ಸಹಯೋಗದಲ್ಲಿ ಕಾಮಗಾರಿ ಆರಂಭಕ್ಕೆ ಯತ್ನಿಸಲಾಗುವುದು ಎಂದರು.
ಕೋವಿಡ್ ನಿಯಂತ್ರಣ
ಪ್ರಧಾನಿ ನರೇಂದ್ರ ಮೋದಿಯವರ ಬದ್ಧತೆಯಿಂದ ಕೋವಿಡ್ ಸಮರ್ಪಕ ನಿರ್ವಹಣೆಯಾಗಿದ್ದು, ಮೂರನೇ ಅಲೆಯನ್ನೂ ನಿಯಂತ್ರಿಸಿ 162 ಕೋಟಿ ಲಸಿಕೆ ನೀಡಲಾಗಿದೆ. 2024 ರವರೆಗೆ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ ವಿರೋಧ ಪಕ್ಷಗಳು ರಾಜಕಾರಣ ಮಾಡಿದ್ದವು. ಆದರೆ ರಾಜ್ಯದಲ್ಲಿ, ಮೊದಲ ಡೋಸ್ 100%, ಎರಡನೇ ಡೋಸ್ 86% ಪ್ರಗತಿಯಾಗಿದೆ ಎಂದರು.
ಸಂಪೂರ್ಣ ಲಸಿಕೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಉತ್ತಮವಾಗಿ ಕೋವಿಡ್ ಲಸಿಕಾಕರಣ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಮೊದಲ ಹಾಗೂ ಎರಡನೇ ಡೋಸ್ 100% ಆಗಲಿದೆ. ಇದು ಹೆಮ್ಮೆಯ ಸಂಗತಿ ಎಂದು ಸಚಿವರು ಹೇಳಿದರು.
