ಈಶ್ವರಪ್ಪ, ಜಾರಕಿಹೊಳಿ ಸೇರಿ ಐವರು ಸಂಪುಟಕ್ಕೆ? ಪಂಚಮಸಾಲಿ ಸಮುದಾಯದ ಒಬ್ಬರಿಗೆ ಮಂತ್ರಿಗಿರಿ

ಬೆಂಗಳೂರು: ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಕಳೆದು ಹೋಗಿದ್ದ ಸಂಪುಟ ವಿಸ್ತರಣೆ ಪ್ರಸ್ತಾಪ ಮತ್ತೆ ಜೀವ ಪಡೆದುಕೊಂಡಿದ್ದು, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೆ ಈಗ ಸದ್ದಿಲ್ಲದೇ ವೇದಿಕೆ ನಿರ್ಮಾಣವಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಡಿ.14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಆ ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ.
ಇದರ ಪೂರ್ವಭಾವಿಯಾಗಿಯೇ ಸಿಎಂ ಬೊಮ್ಮಾಯಿ ಎರಡು ದಿನಗಳ ಹಿಂದೆ ಸಂಘ-ಪರಿವಾರದ ಹಿರಿಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜಕೀಯ ಅನಿವಾರ್ಯತೆಗಾಗಿ ಸಂಪುಟ ವಿಸ್ತರಣೆ ಮಾಡಲೇಬೇಕಿರುವ ಸನ್ನಿವೇಶದ ಬಗ್ಗೆ ಮಾಹಿತಿ ನೀಡಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕಿರುವುದರಿಂದ ಈಶ್ವರಪ್ಪ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಇದ್ದರೆ ಪಕ್ಷ ತೊರೆಯುವುದಾಗಿ ರಮೇಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಪರಿಸ್ಥಿತಿ ಹತೋಟಿಗೆ ತರಲು ಬೊಮ್ಮಾಯಿ ಅವರಿಗೆ ಸಂಪುಟ ವಿಸ್ತರಣೆ ಅನಿವಾರ್ಯ ಅಸ್ತ್ರವಾಗಿದೆ.
