ಕಲಬುರ್ಗಿಯಲ್ಲಿ ಪ್ರವಾಹ ಭೀತಿ; ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

ಕಲಬುರ್ಗಿ: ಜಿಲ್ಲೆಯ ನದಿ ಪಾತ್ರದ ಜನರಿಗೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಜುಲೈ 15ರವರೆಗೆ ಕಲಬುರಗಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಳೆದ ಬಾರಿ ಪ್ರವಾಹಕ್ಕೆ ಸಿಲುಕಿ ನಷ್ಟ ಅನುಭವಿಸಿ ಈಗಷ್ಟೇ ಸುಧಾರಿಸಿಕೊಳ್ಳುತ್ತಿರುವ ರೈತರಿಗೆ ಹಾಗೂ ನದಿ ಪಾತ್ರದ ಜನರಿಗೆ ಮತ್ತೆ ಪ್ರವಾಹ ಭೀತಿ ಶುರುವಾಗಿದೆ. ಭೀಮಾ ನದಿ, ಸನ್ನತಿ ಬ್ರೀಡ್ಜ್ ಕಂ ಬ್ಯಾರೇಜ್, ಬೆಣ್ಣೆತೋರಾ ಜಲಾಶಯ, ಮುಲ್ಲಾಮಾರಿ ಜಲಾಶಯಗಳಲ್ಲಿ ಹಾಗೂ ಜಿಲ್ಲೆಯ ಜೇವರ್ಗಿ, ಅಫಜಲಪುರ, ಕಮಲಾಪುರ, ಚಿಂಚೋಳಿ ಮತ್ತು ಚಿತ್ತಾಪುರ ತಾಲೂಕುಗಳಲ್ಲಿ ಪ್ರವಾಹ ಉಂಟುಗುವ ಸಾಧ್ಯತೆಗಳಿವೆ. ಈಗಾಗಲೇ ಜಲಾಶಯ ಮತ್ತು ಬ್ರಿಡ್ಜ್ ಕಮ್ ಬ್ಯಾರೇಜ್ಗಳಿಂದ ನೀರು ಬಿಡುವ ಮುನ್ಸೂಚನೆ ಕೂಡ ನೀಡಲಾಗಿದೆ.
ಪ್ರವಾಹ ಪರಿಸ್ಥಿತಿ ಹಿನ್ನಲೆಯಲ್ಲಿ ಎಚ್ಚರಿಕೆಯಿಂದರಲು ಕಲಬುರಗಿ ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ. ಜಿಲ್ಲೆಯಲ್ಲಿ ಭಾರೀ ಮಳೆ ಉಂಟಾಗುವ ಸಂಭವ ಹಿನ್ನೆಲೆಯಲ್ಲಿ ಜುಲೈ 8 ರಿಂದ 15 ರವರೆಗೆ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಿದ್ದಾರೆ.
ಜಿಲ್ಲೆಯಲ್ಲಿ ಈಗಾಗಲೇ ಮಳೆ ಸುರಿಯುತ್ತಿದ್ದು, ಗ್ರಾಮೀಣ ಭಾಗದ ನದಿಪಾತ್ರದ ಹಳ್ಳಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇರುವುದರಿಂದ ಹಳ್ಳಿಗಳಲ್ಲಿ ಟಾಸ್ಕ್ ಪೋರ್ಸ ತಂಡಗಳನ್ನು ರಚಿಸಿ ಎಲ್ಲಾ ತಾಲೂಕಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟುಹೋಗದೆ ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯನ್ನು ಎದುರಿಸುವಂತೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದ್ದಾರೆ.
