8 ಸೇತುವೆಗಳು ಜಲಾವೃತ, 16 ಗ್ರಾಮಗಳಿಗೆ ಸಂಪರ್ಕ ಕಡಿತ; ಬೆಳಗಾವಿಯಲ್ಲಿ ಹೈ ಅಲರ್ಟ್

ಬೆಳಗಾವಿ: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಸುತ್ತಮುತ್ತಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ನದಿ ತೀರದ ಪ್ರದೇಶಗಳಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.
ಕೃಷ್ಣಾನದಿಗೆ 70 ಸಾವಿರ ಕ್ಯೂಸೆಕ್ ಪ್ರಮಾಣದ ಒಳ ಹರಿವು ಹೆಚ್ಚಾಗಿದೆ ಯಡೂರು ಕಲ್ಲೋಳ ಸೇತುವೆ ನೀರಿನಲ್ಲಿ ಮುಳುಗಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ದೂದಗಂಗಾ, ವೇದಗಂಗಾ, ಹಿರಣ್ಯಕೇಶಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತಿದ್ದು, ಈಗಾಗಲೇ ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲುಕಿನ 8 ಸೇತುವೆಗಳು ಜಲಾವೃತಗೊಂಡಿವೆ.
ಜತ್ರಾಟ-ಭೀವೆಶಿ, ಭೋಜ ಕಾರದಹಾ, ಅಕ್ಕೋಳ, ಸಿದ್ನಾಖ, ನಗನೂರು, ಗೋಟೂರು, ಮಮದಾಪುರ, ಬೋಜವಾಡಿ-ಕುನ್ನೂರ, ಮಲಿಕವಾಡ, ದತ್ತವಾಡ ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿವೆ. 16 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಪ್ರಮುಖ ಸೇತುವೆಗಳು ಜಲಾವೃತಗೊಂಡಿದ್ದು, ಗ್ರಾಮಗಳ ಸಂಪರ್ಕ ಕಡಿತಗೊಂದಿವೆ. ಪ್ರವಾಹ ಭೀತಿ ಹಿನ್ನೆಲೆಯಲಿ ನದಿ ಪಾತ್ರದ ಜನರಿಗೆ ಸುರಕ್ಷಿತವಾಗಿರುವಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
