ಹಿಜಾಬ್ ಪ್ರಕರಣ: ಹೈಕೋರ್ಟ್ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ನಲ್ಲಿ ಗುರುವಾರವೂ ಮುಂದುವರಿದಿದ್ದ ವಿಚಾರಣೆ ನಾಳೆ ಮಧ್ಯಾಹ್ನ ಎರಡೂವರೆಗೆ ಮುಂದೂಡಲಾಗಿದೆ. ನಾಳೆ ರಾಜ್ಯ ಸರ್ಕಾರದ ಪರ ವಾದಮಂಡನೆ ನಡೆಯಲಿದೆ. ಸಮವಸ್ತ್ರದ ಜತೆ ಹಿಜಾಬ್ಗೆ ಅನುಮತಿ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ನಡೆಸಿತು.
ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರ ಪೂರ್ಣ ಪೀಠದ ಎದುರು ಗುರುವಾರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಪರ ಜಿ.ಆರ್.ಮೋಹನ್ , ಮಧ್ಯಂತರ ಅರ್ಜಿದಾರರ ಪರ ಸುಭಾಷ್ ಝಾ, ಹಿರಿಯ ವಕೀಲ ಎ.ಎಂ. ಧರ್, ಪಿಐಎಲ್ ಅರ್ಜಿದಾರ ಡಾ.ವಿನೋದ್ ಜಿ ಕುಲಕರ್ಣಿ, ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು.
ಹಿಜಾಬ್ ವಿರುದ್ಧ ಅಲ್ಪಸಂಖ್ಯಾತ ಇಲಾಖೆ ಸುತ್ತೋಲೆ
ಈ ನಡುವೆ, ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿ ಕೋರ್ಟ್ ಆದೇಶ ಹಿನ್ನೆಲೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ, ತರಗತಿಗಳಲ್ಲಿ ಕೇಸರಿ ಶಾಲು, ಸ್ಕಾರ್ಫ್, ಹಿಜಾಬ್, ಧಾರ್ಮಿಕ ಬಾವುಟ ಧರಿಸದಂತೆ ಸೂಚನೆ ನೀಡಲಾಗಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ.
