ಹೋಳಿ ಹಬ್ಬ: ನಾಳೆ ಸಂಜೆಯವರೆಗೆ ಮದ್ಯ ನಿಷೇಧ

ದಾವಣಗೆರೆ: ಜಿಲ್ಲೆಯಾದ್ಯಂತ ಹೋಳಿ ಹಬ್ಬಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಜಿಲ್ಲಾಡಳಿತ ನಾಳೆ ಸಂಜೆಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಿದೆ.
ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಹರಿಹರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಲಾಟೆ ನಡೆದಿತ್ತು. ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಮಾತ್ರವಲ್ಲ, ಹರಿಹರ ತಾಲೂಕಿನ ಮಲೇಬೆನ್ನೂರು, ಚನ್ನಗಿರಿ ತಾಲೂಕಿನ ನಲ್ಲೂರಿನಲ್ಲಿಯೂ ಅಹಿತಕರ ಘಟನೆ ನಡೆದಿದ್ದ ಕಾರಣ ಮಾರ್ಚ್ 18ರಿಂದ ಬೆಳಿಗ್ಗೆ ಆರು ಗಂಟೆಯಿಂದ 19ರ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಆದೇಶ ಹೊರಡಿಸಿದ್ದಾರೆ.
ಇಂದು ಕಾಮದಹನ ಇದ್ದು, ಮುಸ್ಲಿಂ ಸಮಾಜದವರು ಷಬ್ – ಎ- ಬರಾತ್ ಆಚರಣೆ ಸಹ ಇದೆ. ಸಾರ್ವಜನಿಕರಿಗೆ ಹಬ್ಬದ ಆಚರಣೆಯ ಸಂಭ್ರಮಕ್ಕೆ ಧಕ್ಕೆ ಬಾರದಂತೆ ಕ್ರಮ ಕೈಗೊಳ್ಳುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಆದೇಶವನ್ನು ಸಂಬಂಧಪಟ್ಟ ಅಬಕಾರಿ, ಪೊಲೀಸರು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಡಿಸಿ ಸೂಚಿಸಿದ್ದಾರೆ.
ರಾಮ್ ಅಂಡ್ ಕೋ ಸರ್ಕಲ್ ನಲ್ಲಿ ಪ್ರತಿವರ್ಷವೂ ಹೋಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಕಳೆದ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಕಳೆಗುಂದಿತ್ತು. ಈ ವರ್ಷ ಸಡಗರ, ಸಂಭ್ರಮದಿಂದ ಆಚರಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಯಾವುದೆ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

