ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಚುರುಕಾಗಿದೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಮೈಸೂರು: ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಚುರುಕಾಗಿದೆ. ಯಾವ ಹಂತದಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಲಾಗುವುದಿಲ್ಲ. ಖಂಡಿತವಾಗಲೂ ಈ ಪ್ರಕರಣವನ್ನು ಭೇದಿಸುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೆ ಆರೋಪಿಗಳು ಪತ್ತೆಯಾಗಿಲ್ಲ. ಆರೋಪಿಗಳ ಪತ್ತೆಗೆ ಸ್ವಲ್ಪ ಸಮಯ ಬೇಕಿದೆ. ವಿಚಾರಣೆಗೆ ತೊಂದರೆಯಾಗುವ ದೃಷ್ಟಿಯಿಂದ ನಾನು ಹೆಚ್ಚಿನ ವಿವರ ನೀಡುವುದಿಲ್ಲ. ಸಂತ್ರಸ್ತೆ ತಮ್ಮ ಹೇಳಿಕೆಯನ್ನು ಪೊಲೀಸರಿಗೆ ತಿಳಿಸಿಲ್ಲ ಎಂದರು. ನಂತರ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ನಾನು ಗೃಹ ಸಚಿವನಾದ ಬಳಿಕ ಇದೇ ಮೊದಲ ಬಾರಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಮಾಡಿದ್ದೇನೆ. ದರ್ಶನ ಮಾಡಿ ನನಗೆ ತುಂಬಾ ಸಂತೋಷವಾಗಿದೆ. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನನಗೆ, ನಮ್ಮ ಪೊಲೀಸ್ ಇಲಾಖೆಗೆ ಶಕ್ತಿಕೊಡುವಂತೆ ಕೇಳಿಕೊಂಡಿದ್ದೇನೆ. ರಾಜ್ಯದ ಜನತೆ ಒಳ್ಳೆಯದು ಮಾಡಲಿ, ಒಳ್ಳೆಯ ಮನಸ್ಸು ಕೊಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.
ಯಾರಿಗೂ ನೋಯಿಸುವ ಉದ್ದೇಶವಿರಲಿಲ್ಲ:
ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರದ ಪ್ರಕರಣದ ವಿಚಾರವಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಾವು ನೀಡಿದ್ದ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಯಾರಿಗೂ ನೋವುಂಟು ಮಾಡುವ ಉದ್ದೇಶದಿಂದ ನಾನು ಆ ಹೇಳಿಕೆ ನೀಡಿರಲಿಲ್ಲ. ಈಗಾಗಲೇ ನಾನು ನನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದೇನೆ. ‘ನಾನು ಮನನೊಂದು ಮಾತನಾಡಿದ್ದೆ. ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಹಾಗೂ ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ ಎಂದರು.
