ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತೇನೆ: ಹೊರಟ್ಟಿ

ಹುಬ್ಬಳ್ಳಿ: ಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ. ಈಗಾಗಲೇ ಬಿಜೆಪಿ ಪಕ್ಷ ಸೇರುವ ಬಗ್ಗೆ ತೀರ್ಮಾನ ಮಾಡಿದ್ದೇನೆ. ಪಕ್ಷ ಸೇರ್ಪಡೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ಯಾವಾಗ ಎಂಬುದು ಗೊತ್ತಿಲ್ಲ. ಆದರೆ ಸೇರ್ಪಡೆ ಆಗುವ ಕಾಲ ಬಂದಿದೆ. ಒಂದು ತೀರ್ಮಾನಕ್ಕೆ ಬರಲಾಗುವುದು. ಈಗಾಗಲೇ ರಾಜ್ಯದ ಬಿಜೆಪಿ ಮುಖಂಡರು ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ತಿಳಿಸಿದ್ದಾರೆ. ಅಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ನನ್ನೊಂದಿಗೆ ಸೇರ್ಪಡೆ ವಿಷಯವಾಗಿ ಮಾತನಾಡಿದ್ದಾರೆ ನಾನು ಕೂಡಾ ಒಪ್ಪಿಕೊಂಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು.
ಚುನಾವಣೆ ದಿನಾಂಕ ಘೋಷಣೆಯ ಬಳಿಕ ಬಿಜೆಪಿ ಸೇರುವ ದಿನಾಂಕ ನಿಗದಿ ಮಾಡಲಾಗುವುದು. ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಬಿಜೆಪಿ ಸೇರ್ಪಡೆ ದಿನಾಂಕವನ್ನು ನಿಗದಿಪಡಿಸಲಾಗುವುದು. ಬಹಳ ದಿನದಿಂದ ಮಾಧ್ಯಮದವರು ಬಿಜೆಪಿ ಸೇರ್ಪಡೆ ಯಾವಾಗ ಯಾವಾಗ ಅಂತಾ ಕೇಳುತ್ತಲೇ ಬಂದಿದ್ದರು. ಆದರೆ ಪ್ರಸ್ತುತ ದಿನಗಳಲ್ಲಿ ಈಗ ಬಿಜೆಪಿ ಸೇರುವ ಪ್ರಸಂಗ ಬಂದಿದೆ. ಹೆಚ್ಚು ದಿನ ಬಿಜೆಪಿ ಸೇರುವ ಗುಟ್ಟು ಮುಚ್ಚಿಡಲು ಆಗುವುದಿಲ್ಲ, ಒಂದಲ್ಲ ಒಂದು ದಿನ ಅದು ಹೊರಗಡೆ ಬರಲೇಬೇಕು. ಹಾಗಾಗಿ ಈಗ ನಾನು ಬಿಜೆಪಿ ಸೇರ್ಪಡೆಗೆ ಒಪ್ಪಿದ್ದೇನೆ. ಅಧಿಕೃತ ದಿನಾಂಕ ಮುಂದೆ ನಿಗದಿಯಾಗುತ್ತದೆ ಎಂದು ತಿಳಿಸಿದರು.
ಬಿಜೆಪಿಯಿಂದ ಪರಿಷತ್ ಚುನಾವಣೆ ಸ್ಪರ್ಧೆಗೆ ಕುಮಾರಸ್ವಾಮಿಯವರು ಒಪ್ಪಿಗೆ ಸೂಚಿಸಿದ್ದಾರೆ. ನಿಮ್ಮ ಸ್ಪರ್ಧೆಗೆ ಬಿಜೆಪಿಯ ಕೆಲವರಿಂದ ವಿರೋಧ ವ್ಯಕ್ತವಾಗುತ್ತಿದೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು ವಿರೋಧ ಮಾಡುತ್ತಿದ್ದಾರೆ ಅದು ನನಗೆ ಬೇಕಾಗಿಲ್ಲ. ಶನಿವಾರ ಬಿ.ಎಸ್.ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಅಲ್ಲದೇ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಎಚ್.ಡಿ.ಕುಮಾರಸ್ವಾಮಿ ಅವರು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
