ಸಿಲಿಂಡರ್, ತೈಲ ಬೆಲೆ ಏರಿಕೆ ಕುರಿತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚಿಸುತ್ತೇನೆ: ಸಿಎಂ ಬೊಮ್ಮಾಯಿ

ಧಾರವಾಡ : ಇದೇ ಸೆಪ್ಟೆಂಬರ್ 5 ರಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಸಾಮಾನ್ಯ ಜನತೆಯ ಮೇಲೆ ಹೊರೆ ಆಗಿರುವ ಸಿಲಿಂಡರ್ ಹಾಗೂ ತೈಲ ಬೆಲೆ ಏರಿಕೆ ವಿಚಾರವಾಗಿ ಅವರೊಂದಿಗೆ ಮಾತನಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗಲೂ ಬೆಲೆಗಳ ಏರಿಕೆಯಾಗಿದೆ. ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಹೆಚ್ಚಳವಾಗಿದೆ. ಸಿಲಿಂಡರ್, ತೈಲ ಬೆಲೆ ಏರಿಕೆ ಕುರಿತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆ ಚರ್ಚಿಸುತ್ತೇನೆ ಎಂದು ಅವರು ತಿಳಿಸಿದರು.
ಕೇರಳ ಗಡಿಯಲ್ಲಿ ರಾಜ್ಯಕ್ಕೆ ಕೊರೊನಾ ನಕಲಿ ನಗೆಟಿವ್ ರಿಪೋರ್ಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಗಡಿ ಭಾಗದಲ್ಲಿ ಎಲ್ಲವನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ. ಸುಳ್ಳು ವರದಿ ನೀಡಿ, ನುಸುಳುವವರ ಮೇಲೆ ಕ್ರಮಕ್ಕೆ ಮುಂದಾಗುತ್ತೇವೆ. ಕೊರೊನಾ ನಕಲಿ ವರದಿ ಹಿಡಿದು ಒಳಗೆ ಬರುವುದನ್ನು ತಡೆಯಲಾಗುವುದು. ಈಗಾಗಲೇ ಗಡಿ ಭಾಗಗಳಲ್ಲಿ ಕೊರೊನಾ ವ್ಯಾಕ್ಸಿನೇಷನ್ ಮಾಡಲಾಗುತ್ತಿದೆ. ಗಡಿ ಭಾಗದಲ್ಲಿರು ಬಹುತೇಕ ಗ್ರಾಮಸ್ಥರಿಗೂ ಕೊರೊನಾ ಲಸಿಕೆಯನ್ನು ನೀಡಲಾಗುತ್ತಿದೆ ಎಂದರು.
ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ದಾವಣಗೆರೆಯಲ್ಲಿ ಪೊಲೀಸ್ ಸ್ಕೂಲ್ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
