ಧರ್ಮದ ಹೆಸರಿನಲ್ಲಿ ಕದನಕ್ಕೆ ಕುಮ್ಮಕ್ಕು: ಹೆಚ್ ಡಿ ಕೆ ಆಕ್ರೋಶ

ಬೆಂಗಳೂರು: ಬೆಲೆ ಏರಿಕೆ ನಿಯಂತ್ರಿಸುವ ವಿಷಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯ ಮುಚ್ಚಿ ಹಾಕಲು ಧರ್ಮದ ಹೆಸರಿನಲ್ಲಿ ಗಲಾಟೆ ಮಾಡಿಸಲಾಗುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಪಕ್ಷ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ವೇಳೆ ಮಾತನಾಡಿದ ಹೆಚ್ ಡಿ ಕೆ ಬೆಲೆ ಏರಿಕೆ ವಿಷಯದಲ್ಲಿ ಜನರ ಆಕ್ರೋಶ ಹೆಚ್ಚುತ್ತಿದೆ. ವಿಷಯಾಂತರ ಮಾಡುವುದಕ್ಕಾಗಿ ಹಿಜಾಬ್, ಹಲಾಲ್ ಕಟ್ ಹೆಸರಿನಲ್ಲಿ ಗಲಭೆ ಸೃಷ್ಟಿಸುತ್ತಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುತ್ತಿದ್ದಾರೆ ಎಂದರು.
ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಿಸುತ್ತಿದೆ. ರಾಜ್ಯ ಸರ್ಕಾರ ವಿದ್ಯುತ್ ದರ ಹೆಚ್ಚಿಗೆ ಅಘಾತ ನೀಡಿದೆ. ಇದ್ರ ಜೊತೆಗೆ ಹಾಲಿನ ದರ ಹೆಚ್ಚಳಕ್ಕೆ ಮುಂದಾಗಿದೆ. ಈಗಾಗಲೇ ಎಲ್ ಪಿ ಜಿ ಸಿಲಿಂಡರ್ ದರ 1000 ರೂ ದಾಟಿದೆ. ಒಂದು ಚೀಲ ಸಿಮೆಂಟ್ ಬೆಲೆ 500ರೂಪಾಯಿ ತಲುಪಿದೆ. ಇಂತಹ ಸ್ಥಿತಿಯಲ್ಲಿ ಸಾಮಾನ್ಯ ಜನರು ಬದುಕುವುದು ಹೇಗೆ ಎಂದು ಪ್ರಶ್ನಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಮುಖ್ಯಮಂತ್ರಿ ತುಟಿ ಬಿಚ್ಚುತ್ತಿಲ್ಲ. ಧರ್ಮದ ಹೆಸರಿನಲ್ಲಿ ಕದನಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲು ಪೊಲೀಸರು ಅಡ್ಡಿ ಪಡಿಸುತ್ತಾರೆ. ಆದರೆ ಬಿಜೆಪಿ ಸರ್ಕಾರ ತನಗೆ ಬೇಕಾದ ಸಂಘಟನೆಗಳಿಗೆ ಇಷ್ಟ ಬಂದಾಗೆಲ್ಲ ಶೋಭಾಯಾತ್ರೆ ನಡೆಸಲು ಒಪ್ಪಿಗೆ ನೀಡುತ್ತದೆ ಎಂದು ಆಕ್ರೋಶ ಹೊರ ಹಾಕಿದರು.
