ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಯಡಿಯೂರಪ್ಪ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗೆ ಬಿಎಸ್ವೈ ತೆರೆ ಎಳೆದಿದ್ದಾರೆ. ಮಧ್ಯಾಹ್ನ ರಾಜ್ಯಪಾಲರ ಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ನೀಡುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ
ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿ ಅವರು, ಶಿಕಾರಿಪುರಿಂದ ಬಿಜೆಪಿಯೊಂದಿಗೆ ನಾನು ಬಂದಿದ್ದೇನೆ. ಶಿಕಾರಿಪುರದಲ್ಲಿ ಸಂಘದ ಪ್ರಚಾರಕನಾಗಿ ಕಾರ್ಯ ನಿರ್ವಹಿಸಿ, ಚುನಾವಣೆಯಲ್ಲಿ ಗೆದ್ದು, ಘಟಕದ ಅಧ್ಯಕ್ಷನಾಗಿ, ವಿಧಾನಸಭಾ ವಿಪಕ್ಷ ನಾಯಕನಾಗಿ, ಮುಖ್ಯಮಂತ್ರಿಯಾಗಿ ಪಕ್ಷದ ಬೇರೆ ಬೇರೆ ಹುದ್ದೆಗಳಲ್ಲಿ ಕೆಲಸ ಮಾಡಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ ಎಂಬ ತೃಪ್ತಿ ನನಗಿದೆ ಎಂದು ಬಿ ಎಸ್ ವೈ ಭಾವುಕರಾಗಿ ನುಡಿದಿದ್ದಾರೆ.
ಮೋದಿ ಮತ್ತೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಬರಲಿ, ದೇಶವನ್ನು ವಿಶ್ವ ಮಟ್ಟದಲ್ಲಿ ತೆಗೆದುಕೊಂಡು ಹೋಗುವ ಶಕ್ತಿ ಅವರಿಗೆ ಒಲಿಯಲಿ ಎಂದು ಅವರು ಶುಭ ಹಾರೈಸಿದ್ದಾರೆ.
75 ವರ್ಷ ಮೀರಿದವರು ಕೇಂದ್ರ ಸಚಿವರಾಗಬಾರದು ಮತ್ತು ಸಿಎಂ ಆಗಬಾರದು ಎಂದು ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದರು. ಆದರೆ ನನಗೆ ಮಾತ್ರ ಅದಕ್ಕೆ ವಿನಾಯಿತಿ ನೀಡಿ ಎರಡು ವರ್ಷ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟರು ಎಂದೂ ಅವರು ಭಾವುಕರಾಗಿ ಹೇಳಿದರು.
