ಹೆದ್ದಾರಿ ಕಾಮಗಾರಿ ಕುಂಠಿತ: ರಸ್ತೆ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಶಾಸಕಿ ಅಂಜಲಿ ನಿಂಬಾಳ್ಕರ್

ಬೆಳಗಾವಿ : ಖಾನಾಪುರ-ರಾಮನಗರ ಹೆದ್ದಾರಿ ಕಾಮಗಾರಿ ದುರಸ್ತಿ ಮಂದಗತಿಯಿಂದ ಆಗುತ್ತಿದ್ದು, ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ, ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು, ರಸ್ತೆ ಮೇಲೆಯೇ ಗಂಟೆಗಟ್ಟಲೆ ಕುಳಿತುಕೊಂಡು ಪ್ರತಿಭಟನೆ ಮಾಡಿದರು.
ಖಾನಾಪೂರ ತಾಲೂಕಿನ ಗೋವಾ ಕ್ರಾಸ್ ದಿಂದ ರುಮೇವಾಡಿ ಕ್ರಾಸ್ ವರೆಗೆ ಕಾಲ್ನಡಿಗೆ ಮುಖಾಂತರ ನಡೆದು, ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಧಿಕ್ಕಾರ ಕೂಗಿ, ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಡಾ ಅಂಜಲಿ ನಿಂಬಾಳ್ಕರ್, ಖಾನಾಪೂರ ತಾಲೂಕಿನ ಮೂಲಕ ಹಾದು ಹೋಗುವ ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯವಹಿಸುತ್ತಿದೆ. ಇದರಿಂದ ಖಾನಾಪುರ ತಾಲೂಕಿನ 40 ಹಳ್ಳಿಗಳ ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ತಿಳಿಸಿದರು.
ಈ ಹಿಂದೆ ರಸ್ತೆ ದುರಸ್ತಿಗೆ ಆಗ್ರಹಿಸಿ ಮನವಿ ಸಲ್ಲಿಸಿದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕ್ರಮಕ್ಕೆ ಮುಂದಾಗಿಲ್ಲ. ಹಾಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಮಾಡಲಾಗುತ್ತಿದೆ. ಈಗಲಾದರೂ ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ತ್ವರಿತವಾಗಿ ಮೂಗಿಸಬೇಕು ಎಂದು ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಎಂದು ಆಗ್ರಹಿಸಿದರು.
