ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು: ಡಿ.ಕೆ.ಶಿವಕುಮಾರ್ ಪ್ರಶ್ನೆ

ನವದೆಹಲಿ: ಆಪರೇಷನ್ ಕಮಲ, ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಬಿಜೆಪಿ ನಾಯಕರು ಹಣ ಖರ್ಚು ಮಾಡಿದ ಬಗ್ಗೆ ಆರೋಪ ಕೇಳಿ ಬಂದಾಗ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಸಂಸ್ಥೆಗಳು ಎಲ್ಲಿದ್ದವು? ಬಿಜೆಪಿಯವರ ವ್ಯವಹಾರಗಳೆಲ್ಲಾ ಸರಿಯಾಗಿದ್ದವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಪಕ್ಷದ ಶಾಸಕರಾದ ಜಮೀರ್ ಅಹ್ಮದ್ ಅವರ ಮನೆ, ಕಚೇರಿ ಮೇಲಿನ ಇ.ಡಿ. ದಾಳಿ ಖಂಡನೀಯ. ಕಾನೂನು ಪ್ರಕಾರ ಅದನ್ನು ಎದುರಿಸಲು ಜಮೀರ್ ಅವರು ಸಮರ್ಥರಿದ್ದಾರೆ. ಎರಡು ವರ್ಷಗಳ ಹಿಂದೆ ಇ.ಡಿ. ಅಧಿಕಾರಿಗಳು ಜಮೀರ್ ಅವರಿಗೆ ನೋಟಿಸ್ ಜಾರಿ ಮಾಡಿ, ಅವರನ್ನು ಕರೆಸಿ ವಿಚಾರಣೆ ಮಾಡಿದ್ದಾರೆ. ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವುದಾಗಿ ಜಮೀರ್ ಅವರೇ ನನಗೆ ತಿಳಿಸಿದ್ದರು. ಈಗಿನ ಸಂದರ್ಭದಲ್ಲಿ ದಾಳಿ ಅಗತ್ಯ ಇರಲಿಲ್ಲ. ಯಾವ ರೀತಿ ಈ ಕಿರುಕುಳ ನೀಡಲಾಗುತ್ತದೆ ಎಂಬುದು ನನಗೂ ಗೊತ್ತಿದೆ ಎಂದರು.
‘ಜಮೀರ್ ಹೇಳಿಕೆಗಳು ಮುಗಿದಿರುವಾಗ ಅವರ ನಿವಾಸ ಹಾಗೂ ಆಪ್ತರ ಮನೆಗಳ ಮೇಲೆ ದಾಳಿ ಮಾಡಿ, ಕಿರುಕುಳ ನೀಡುತ್ತಿರುವುದು ಖಂಡನೀಯ. ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ, ಎಸಿಬಿ ನಿಜಕ್ಕೂ ಕಾರ್ಯಪ್ರವೃತ್ತವಾಗಿದ್ದರೆ, ಮಾಜಿ ಸಚಿವ ಶ್ರೀನಿವಾಸಗೌಡರು ವಿಧಾನಸಭೆಯಲ್ಲಿ ಆಪರೇಷನ್ ಕಮಲದ ವಿಚಾರವಾಗಿ ಸಿ.ಪಿ. ಯೋಗೇಶ್ವರ್ ಹಾಗೂ ಅಶ್ವಥ್ ನಾರಾಯಣ ಅವರು 30 ಕೋಟಿ ಹಣದ ಆಮಿಷ ನೀಡಿ, 5 ಕೋಟಿ ಹಣವನ್ನು ನನ್ನ ಮನೆಯಲ್ಲಿ ಇಟ್ಟು ಹೋಗಿದ್ದರು ಎಂದು ಆರೋಪ ಮಾಡಿದಾಗ ಈ ಇಲಾಖೆಗಳು ಎಲ್ಲಿ ಹೋಗಿದ್ದವು ಎಂದು ಪ್ರಶ್ನಿಸಿದರು.
‘ಅವರ ಮನೆ ಮೇಲೆ ದಾಳಿ ಆದವಾ? ಅವರಿಗೆ ಈ ತನಿಖಾ ಸಂಸ್ಥೆಗಳಿಂದ ನೋಟೀಸ್ ಜಾರಿಯಾಯ್ತಾ? ವಿಧಾನಸಭೆಯಲ್ಲೇ ನೀಡಿದ ಹೇಳಿಕೆಗಿಂತ ಬೇರೆ ಸಾಕ್ಷಿ ಏನು ಬೇಕಿತ್ತು..? ಇವುಗಳು ಭ್ರಷ್ಟಾಚಾರ, ಹಣ ಅವ್ಯವಹಾರದ ಪ್ರಕರಣಗಳಲ್ಲವೇ? ಯಾಕೆ ಈ ಬಗ್ಗೆ ಪ್ರಕರಣಗಳು ದಾಖಲಾಗಲಿಲ್ಲ. ನಾನು ಅವರ ವೈಯಕ್ತಿಕ ವ್ಯವಹಾರಗಳ ಬಗ್ಗೆ ಮಾತನಾಡುತ್ತಿಲ್ಲ. ಅವರ ಬಾಯಿಂದ ಬಂದ ನುಡಿಮುತ್ತುಗಳನ್ನೇ ಆಧರಿಸಿ ಪ್ರಶ್ನೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.
‘ಯಾರ್ಯಾರ ಅನುಕೂಲಕ್ಕೆ ಹೇಗೆ ಬೇಕೋ, ಹಾಗೆ ಈ ಸಂಸ್ಥೆಗಳು ನಡೆದುಕೊಳ್ಳುತ್ತಿವೆ. ಅಧಿಕಾರ ಇದೆ ಎಂದು ಈ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ವಿಚಾರವಾಗಿ ಕಾನೂನು ರೀತಿಯಲ್ಲಿ ಜಮೀರ್ ಅವರು ಉತ್ತರ ನೀಡಲಿದ್ದಾರೆ. ಅವರಿಗೆ ಆ ಶಕ್ತಿ ಇದೆ. ಆದರೆ ಕಾಂಗ್ರೆಸ್ ನಾಯಕರಿಗೆ ಒಂದು ಕಾನೂನು, ಬಿಜೆಪಿಯವರಿಗೆ ಇನ್ನೊಂದು ಕಾನೂನು ಎಷ್ಟು ಸರಿ? ಬಿಜೆಪಿಯವರೆಲ್ಲಾ ಬಹಳ ಸಾಚಾತನದಲ್ಲಿ ವ್ಯವಹಾರ ಮಾಡುತ್ತಿದ್ದಾರಾ..? ಏಕೆ ಈ ತಾರತಮ್ಯ ಆಗುತ್ತಿದೆ ಎಂದು ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
