ಲಾರಿ-ಬೈಕ್ ಅಪಘಾತ: 1ವರ್ಷ ಜೈಲು ಶಿಕ್ಷೆ 11 ಸಾವಿರ ದಂಡ!

ಧಾರವಾಡ: ಕಳೆದ 2013ರಲ್ಲಿ ಹುಬ್ಬಳ್ಳಿ-ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದ ಲಾರಿ ಹಾಗೂ ಬೈಕ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಲಯವು ಲಾರಿ ಚಾಲಕನಿಗೆ ಶಿಕ್ಷೆ ಪ್ರಕಟ ಮಾಡಿ ಅಂತಿಮ ತೀರ್ಪು ನೀಡಿದೆ. ಲಾರಿ ಚಾಲಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 11 ಸಾವಿರ ರೂಪಾಯಿ ದಂಡ ವಿಧಿಸಿ ಧಾರವಾಡ ಎರಡನೇ ಜೆಎಂಎಫ್ಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.
2013ರಲ್ಲಿ ಹುಬ್ಬಳ್ಳಿ, ಧಾರವಾಡ ಬೈಪಾಸ್ ಮಧ್ಯೆ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಧಾರವಾಡದ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳುತ್ತಿದ್ದ ಬೈಕ್ಗೆ, ಹುಬ್ಬಳ್ಳಿ ಕಡೆಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಲಾರಿ ಡಿಕ್ಕಿ ಹೊಡೆದಿತ್ತು. ಇದರಿಂದ ಬೈಕ್ ಸವಾರ ಕೀರ್ತಿವಂತ ಕಳ್ಳಿಮನಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದರು.
ಈ ಕುರಿತು ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಪಘಾತದ ತನಿಖೆ ನಡೆಸಿದ್ದ ಪೊಲೀಸರು ಅಪಘಾತದ ಕುರಿತು ಸಮಗ್ರ ತನಿಖೆ ಕೈಗೊಂಡು, ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನ ದೋಷಿಯನ್ನಾಗಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಕುರಿತು ಸುಧೀರ್ಘ ವಿಚಾರಣೆ ನಡೆಸಿದ ಎರಡನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರು, ಲಾರಿ ಚಾಲಕನದ್ದೇ ತಪ್ಪು ಎಂದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಲಾರಿ ಚಾಲಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 11 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
